ಬೆಂಗಳೂರು:ಮಹದಾಯಿ ನ್ಯಾಯಮಂಡಳಿ ತೀರ್ಪು ವಿರೋಧಿಸಿ 2018ರ ಏಪ್ರಿಲ್ ಹಾಗೂ ಆಗಸ್ಟ್ನಲ್ಲಿ ರಾಜ್ಯದ ವಿವಿಧೆಡೆ ನಡೆದ ಬಂದ್ ಹಾಗೂ ಪ್ರತಿಭಟನೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ತಿಗೆ ನಷ್ಟ ಉಂಟು ಮಾಡಿದ ಆರೋಪಕ್ಕೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಅಭಯ್ ಎಸ್.ವೋಕಾ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಪ್ರತಿವಾದಿಗಳಾದಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಆಮ್ ಆದ್ಮಿ ಪಕ್ಷ, ಸಿಪಿಐ, ಸಿಪಿಎಂ, ಕರ್ನಾಟಕ ರಕ್ಷಣಾ ವೇದಿಕೆ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸೇರಿದಂತೆ ಕನ್ನಡ ಪರ ಸಂಘಟನೆಗಳಿಗೆ ನೋಟಿಸ್ ಜಾರಿ ಮಾಡಲು ವಿಭಾಗೀಯ ನ್ಯಾಯಪೀಠ ಆದೇಶ ಮಾಡಿತು.
ಇದೇ ಸಂದರ್ಭ,‘ಶಾಸಕ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಪ್ರತಿಭಟನೆ ನಡೆಸಿದ ವೇಳೆ ಉಂಟಾದ ಆಸ್ತಿಪಾಸ್ತಿ ನಷ್ಟಕ್ಕೆ ಕಾರಣರಾದರ ಪತ್ತೆಗೆ ಹಾಗೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡ ಬಗ್ಗೆ ವರದಿ ಸಲ್ಲಿಸಿ’ ಎಂದು ಸರ್ಕಾರಕ್ಕೆ ನ್ಯಾಯಪೀಠ ಸೂಚಿಸಿತು.