ಬೆಂಗಳೂರು/ಚೆನ್ನೈ: ಗಾಜಾ ಚಂಡಮಾರುತದ ಪರಿಣಾಮ ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
‘ಗಾಜಾ ಪರಿಣಾಮವಾಗಿ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ. ಹೀಗಾಗಿ ತಮಿಳುನಾಡಿನ ಕರಾವಳಿ ಪ್ರದೇಶದಲ್ಲಿ ಬುಧವಾರ ದಿಂದಲೇ ಭಾರೀ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. ಪೂರ್ವ ಕರಾವಳಿಯಾದ್ಯಂತ ಇದೇ ರೀತಿ ಮಳೆಯಾಗಬಹುದು’ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಹೇಳಿದರು.
‘ಬೆಂಗಳೂರು, ರಾಮನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿಯೂ ಎರಡು ದಿನಗಳ ಕಾಲ ಸಾಧಾರಣ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ’ ಎಂದು ತಿಳಿಸಿದರು.
‘ದಕ್ಷಿಣ ಒಳನಾಡಿನಲ್ಲಿ ಎರಡು ದಿನಗಳವರೆಗೆ ಮಳೆಯಾಗುವ ಸಾಧ್ಯತೆಯಿದೆ’ ಎಂದು ರಾಜ್ಯ ಪ್ರಕೃತಿ ವಿಕೋಪ ನಿಗಾ ಘಟಕದ ನಿರ್ದೇಶಕ ಜಿ.ಎಸ್.ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.