ಬೆಳಗಾವಿ: ‘ಮುಂಬೈ ಕರ್ನಾಟಕಕ್ಕೆ ‘ಕಿತ್ತೂರು ಕರ್ನಾಟಕ’ ಎಂದು ಮರುನಾಮಕರಣ ಮಾಡಬೇಕು’ ಎಂದು ಆಗ್ರಹಿಸಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.
‘ಹೈದರಾಬಾದ್ ಕರ್ನಾಟಕ ಪ್ರದೇಶವನ್ನು ‘ಕಲ್ಯಾಣ ಕರ್ನಾಟಕ’ ಎಂದು ಮರುನಾಮಕರಣ ಮಾಡಿರುವುದು ಸ್ವಾಗತಾರ್ಹ. ಹಿರಿಯ ಸಂಶೋಧಕ ಡಾ.ಚಿದಾನಂದಮೂರ್ತಿ ಅವರು ಹೈದರಾಬಾದ್ ಹಾಗೂ ಮುಂಬೈ ಕರ್ನಾಟಕದ ಭಾಗಗಳಿಗೆ ಕ್ರಮವಾಗಿ ‘ಕಲ್ಯಾಣ ಕರ್ನಾಟಕ’ ಹಾಗೂ ‘ಕಿತ್ತೂರು ಕರ್ನಾಟಕ’ ಎಂದು ಮರುನಾಮಕರಣ ಮಾಡುವಂತೆ ಆಗ್ರಹಿಸಿ ನಡೆಸಿದ ಹೋರಾಟಗಳಿಗೆ ಸಮಿತಿಯು ಬೆಂಬಲ ನೀಡಿದೆ. ಆದರೆ, ಮುಂಬೈ ಕರ್ನಾಟಕದವರ ಬೇಡಿಕೆ ಈಡೇರಿಸದೇ ಇರುವುದು ಜನರಲ್ಲಿ ತೀವ್ರ ನಿರಾಸೆಯನ್ನುಂಟು ಮಾಡಿದೆ’ ಎಂದು ತಿಳಿಸಿದ್ದಾರೆ.
‘ಹೈದರಾಬಾದ್ ಕರ್ನಾಟಕದ 41 ಶಾಸಕರು ಮರುನಾಮಕರಣಕ್ಕೆ ಒತ್ತಾಯಿಸಿ ಮನವಿ ಸಲ್ಲಿಸಿದ್ದರು. ಆದರೆ, ಮುಂಬೈ ಕರ್ನಾಟಕದ ಶಾಸಕರು ಮನವಿ ಸಲ್ಲಿಸಿದ ಮಾಹಿತಿ ಇಲ್ಲ. ಸರ್ಕಾರವು ಮನವಿ ಅಪೇಕ್ಷಿಸದೇ ‘ಕಿತ್ತೂರು ಕರ್ನಾಟಕ’ ಎಂದು ಮರುನಾಮಕರಣ ಮಾಡಿ, ಐತಿಹಾಸಿಕ ನಿರ್ಧಾರ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.