ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಬೇಡಿಕೆ ಕುರಿತ ಸಮೀಕ್ಷೆಗೆ ಸಿಎಂ ಸೂಚನೆ 

ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ​
Last Updated 15 ಜೂನ್ 2020, 8:03 IST
ಅಕ್ಷರ ಗಾತ್ರ

ಬೆಂಗಳೂರು: ‘ಸಮಾಜ ಕಲ್ಯಾಣ ಇಲಾಖೆ ನಡೆಸುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ಇರುವ ಬೇಡಿಕೆ ಕುರಿತಂತೆ ಸಮೀಕ್ಷೆ ನಡೆಸಬೇಕು’ ಎಂದು ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸೋಮವಾರ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ, ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಾಲೆಗಳು ಇರುವ ಹಿನ್ನೆಲೆಯಲ್ಲಿ ಈ ಸಮೀಕ್ಷೆ ನಡೆಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಕ್ರೈಸ್ ವಸತಿ ಶಾಲೆಗಳಲ್ಲಿ 660 ಶಿಕ್ಷಕರು ಮತ್ತು 183 ಪದವಿಪೂರ್ವ ಕಾಲೇಜು ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದೆ. 993 ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ನೇಮಕಾತಿ ದಾಖಲಾತಿ ಪರಿಶೀಲನೆ ಹಂತದಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಆಗ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಶಿಕ್ಷಣ ಇಲಾಖೆ ನೆರವಿನೊಂದಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಿದರು.

2019-20ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಭಿವೃದ್ಧಿಗಾಗಿ ಎಸ್‌ಸಿಎಸ್‌ಪಿ ಮತ್ತು ಎಸ್‌ಟಿಪಿ ಯೋಜನೆಯಡಿ ಶೇ 94.51 ಗುರಿ ಸಾಧನೆಯಾಗಿದೆ. ಈ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ 8,270 ಕೊಳವೆ ಬಾವಿ ಕೊರೆಯಲಾಗಿದ್ದು, 10,201 ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಗಂಗಾ ಕಲ್ಯಾಣ ಯೋಜನೆಯಡಿ ಬಾಕಿ ಇರುವ 8,911 ಘಟಕಗಳ ವಿದ್ಯುದೀಕರಣಕ್ಕೆ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ನಗರ ಪ್ರದೇಶದಲ್ಲಿ ಮಾತ್ರ ಐರಾವತ ಯೋಜನೆಯಡಿ ಟ್ಯಾಕ್ಸಿ ವಿತರಣೆ ಯಶಸ್ವಿಯಾಗುತ್ತಿದೆ. ಇತರ ಪ್ರದೇಶಗಳಲ್ಲಿ ಸರಕು ಸಾಗಣೆ ವಾಹನಗಳನ್ನು ಒದಗಿಸುವಂತೆ ಅವರು ಸಲಹೆ ನೀಡಿದರು.

ಕೋವಿಡ್‌ 19 ಲಾಕ್‌ಡೌನ್‌ ಸಂದರ್ಭದಲ್ಲಿ ಲಿಡ್ಕರ್ ಮೂಲಕ 11,772 ಚರ್ಮ ಕುಶಲಕರ್ಮಿಗಳಿಗೆ ತಲಾ ₹ 5 ಸಾವಿರ ನೆರವು ನೀಡಿರುವ ವಿಷಯವೂ ಸಭೆಯಲ್ಲಿ ಚರ್ಚೆಯಾಯಿತು.

ಇಲಾಖೆಯ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿನಿಲಯಗಳು ಶಿಕ್ಷಣ ಇಲಾಖೆಯ ವೇಳಾಪಟ್ಟಿಯಂತೆ ಕಾರ್ಯಾರಂಭ ಮಾಡಲಿವೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಆರೋಗ್ಯಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇಲಾಖೆಯ ವಸತಿ ಶಾಲೆಗಳು ಹಾಗೂ ಹಾಸ್ಟೆಲ್‌ಗಳ ಕ್ವಾರಂಟೈನ್ ಕೇಂದ್ರಗಳಲ್ಲಿ 42 ಸಾವಿರಕ್ಕೂ ಹೆಚ್ಚು ಜನರು ಆಶ್ರಯ ಪಡೆದಿದ್ದರು ಎಂದೂ ಅಧಿಕಾರಿಗಳು ಮಾಹಿತಿ ನೀಡಿದರು.

ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT