ಬಿಎಸ್ವೈ ಭೇಟಿ ಮಾಡಿದ ರೋಶನ್ ಬೇಗ್

ಬೆಂಗಳೂರು: ಶಿವಾಜಿನಗರದ ಅನರ್ಹ ಶಾಸಕ ಆರ್.ರೋಷನ್ಬೇಗ್ ಮಂಗಳವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಶಿವಾಜಿನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಸಹಕರಿಸುವಂತೆ ಯಡಿಯೂರಪ್ಪ ಅವರು ಬೇಗ್ಗೆ ಮನವಿ ಮಾಡಿದ್ದು, ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಸಂಪೂರ್ಣ ಸಹಕಾರ ನೀಡುವುದಾಗಿ ಬೇಗ್ ಭರವಸೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.
ಇತ್ತೀಚೆಗೆ ಅನರ್ಹ ಶಾಸಕರು ಬಿಜೆಪಿ ಸೇಪರ್ಡೆಗೊಂಡ ಸಂದರ್ಭದಲ್ಲಿ ಬೇಗ್ ಕೂಡ ಬಿಜೆಪಿ ಸೇರಲು ಉತ್ಸುಕರಾಗಿದ್ದರು. ಆದರೆ, ಐಎಂಎ ಪ್ರಕರಣದಲ್ಲಿ ಆರೋಪಿ ಆಗಿರುವುದರಿಂದ ಮತ್ತು ಸಂಘ ಪರಿವಾರ ವಿರೋಧಿಸಿದ ಕಾರಣ ಬಿಜೆಪಿ ಪ್ರವೇಶ ಸಿಗಲಿಲ್ಲ. ಪಕ್ಷೇತರರಾಗಿ ಕಣಕ್ಕಿಳಿಯುತ್ತಾರೆ ಎಂಬ ವದಂತಿ ಹಬ್ಬಿತ್ತು. ಅಂತಿಮವಾಗಿ ಅವರು ಚುನಾವಣಾ ಕಣದಿಂದ ಹಿಂದಕ್ಕೆ ಸರಿದರು.
ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವ ಸಂಕಲ್ಪ ತೊಟ್ಟಿರುವ ಬೇಗ್ ಕ್ಷೇತ್ರದಲ್ಲಿ ಬಿಜೆಪಿಗೆ ಶಕ್ತಿ ತುಂಬಲು ಮುಂದಾಗಿದ್ದಾರೆ ಎಂದು ಮೂಲಗಳು ಹೇಳಿವೆ.
ತಮ್ಮ ಪುತ್ರನಿಗೆ ರಾಜಕೀಯ ಭವಿಷ್ಯ ಕಲ್ಪಿಸುವ ಕುರಿತು ಅವರು ಮುಖ್ಯಮಂತ್ರಿಯವರೊಂದಿಗೆ ವಿಷಯ ಪ್ರಸ್ತಾಪಿಸಿದ್ದಾರೆ ಎಂದೂ ಹೇಳಲಾಗಿದೆ.