ಬೆಳಗಾವಿ: ‘ಪಕ್ಷದ ಹಿರಿಯ ನಾಯಕ, ರಾಜ್ಯಸಭಾ ಸ್ಥಾನಕ್ಕೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಂದಿರುವ ಪ್ರಾಣ ಬೆದರಿಕೆ ಕರೆಯ ಹಿಂದೆ ಆರ್ಎಸ್ಎಸ್ ಕೈವಾಡ ಇರಬಹುದು’ ಎಂದು ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಪಿ.ವಿ. ಮೋಹನ್ ಆರೋಪಿಸಿದರು.
ನಗರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿರುವ ಬಿಜೆಪಿ ಸರ್ಕಾರವು ಸಂಘ ಪರಿವಾರದ ಕೈಗೊಂಬೆಯಾಗಿದೆ’ ಎಂದೂ ಆರೋಪಿಸಿದರು.
‘ಆರ್ಎಸ್ಎಸ್ ಹಿನ್ನೆಲೆಯವರಿಗೆ ರಾಜ್ಯ ಸರ್ಕಾರದಲ್ಲಿ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ ಅವರ ನಿರ್ಣಯಗಳೇ ಜಾರಿಗೊಳ್ಳುತ್ತಿವೆ. ಬಿ.ಎಸ್. ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗುತ್ತಿದೆ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಆರ್ಎಸ್ಎಸ್ ಹುನ್ನಾರ ನಡೆಸಿದೆ’ ಎಂದು ಆರೋಪಿಸಿದರು.
‘ಸಮ್ಮಿಶ್ರ ಸರ್ಕಾರವನ್ನು ಹೇಗೆ ಬೆಳಗಾವಿ ಜಿಲ್ಲೆಯ ನಾಯಕರು ಪತನಗೊಳಿಸಿದರೋ ಅದೇ ರೀತಿ ಬಿಜೆಪಿ ಸರ್ಕಾರವನ್ನೂ ಪತನಗೊಳಿಸಲಿದ್ದಾರೆ. ಇನ್ನೇನು ಆರು ತಿಂಗಳಿನಲ್ಲಿ ಸರ್ಕಾರ ಉರುಳಲಿದೆ’ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ (ಗ್ರಾಮೀಣ) ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಮುಖಂಡರಾದ ಫಿರೋಜ್ ಸೇಠ್, ರಾಜು ಸೇಠ್, ಇತರರು ಉಪಸ್ಥಿತರಿದ್ದರು.