ಬೆಂಗಳೂರು:'ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಚೊಚ್ಚಲ ಬಜೆಟ್, ನಮ್ಮನಿರೀಕ್ಷೆಗಳನ್ನು ಹಸಿಯಾಗಿಸಿದೆ’ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
‘ರೈತ ಉತ್ಪಾದಕ ಸಂಘಗಳ ಸ್ಥಾಪನೆಗೆ ಒತ್ತು, ಎಪಿಎಂಸಿಗಳಲ್ಲಿ ಆನ್ಲೈನ್ ಮಾರುಕಟ್ಟೆ ಬಲಪಡಿಸುವ ಕಾರ್ಯಕ್ರಮ ಹಾಗೂ ಗ್ರಾಮೀಣ ಸಾಂಪ್ರದಾಯಿಕ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಯೋಜನೆಗಳು ಸ್ವಾಗತಾರ್ಹ. ಆದರೆ ರೈತರ ಆತ್ಮಸ್ಥೈರ್ಯ ಹೆಚ್ಚಿಸಲು ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸಿದ್ದರೆ ಚೆನ್ನಾಗಿರುತ್ತಿತ್ತು’ ಎಂದು ಅಭಿಪ್ರಾಯಪಟ್ಟಿದ್ದಾರೆ.
‘ಜಿಎಸ್ಟಿತೆರಿಗೆಯಲ್ಲಿ ರಾಜ್ಯದ ಪಾಲಿನ ಮೊತ್ತ ಕಡಿಮೆಯಾಗುವ ಸಾಧ್ಯತೆ ಇದೆ.ರಾಜ್ಯದ ಪಾಲಿಗೆ ಸುಮಾರು ₹1600 ಕೋಟಿಗಳಷ್ಟು ಕೊರತೆಯಾಗಲಿದೆಎಂದು ಅಂದಾಜಿಸಲಾಗಿದೆ. ಇದರಿಂದ ರಾಜ್ಯಗಳ ಆರ್ಥಿಕತೆಯ ಮೇಲೆ ದೊಡ್ಡ ಹೊಡೆತ ಬೀಳಲಿದೆ’ ಎಂದುಕಳವಳ ವ್ಯಕ್ತಪಡಿಸಿದ್ದಾರೆ.
‘ಪೆಟ್ರೋಲ್, ಡೀಸೆಲ್ಮೇಲೆ ಸೆಸ್ ಏರಿಕೆ ಮಾಡಿರುವುದರಿಂದ ರಾಜ್ಯವು ಇಂಧನ ಮೇಲೆ ಸೆಸ್ ವಿಧಿಸಲು ಅವಕಾಶ ಕಡಿಮೆ ಮಾಡಿದಂತಾಗಿದೆ. ಅಲ್ಲದೆ, ಇಂಧನ ಬೆಲೆ ಏರಿಕೆಯಿಂದ ಪ್ರತಿಯೊಬ್ಬರಿಗೂ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹೊರೆಯಾಗಲಿದೆ’ ಎಂದಿದ್ದಾರೆ.
‘ನಮ್ಮ ರಾಜ್ಯವನ್ನು ರಾಜ್ಯಸಭೆಯಲ್ಲಿ ಪ್ರತಿನಿಧಿಸುತ್ತಿರುವ ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ರೈಲ್ವೆ ಯೋಜನೆಗಳಿಗೆ ಅದರಲ್ಲೂ ಉಪನಗರರೈಲು ಯೋಜನೆಗಳಿಗೆ ಹೆಚ್ಚಿನ ಕೊಡುಗೆ ನೀಡುವರೆಂದು ನಿರೀಕ್ಷಿಸಿದ್ದೆ. ಈ ನಿಟ್ಟಿನಲ್ಲಿ ಯಾವುದೇ ಘೋಷಣೆ ಮಾಡದಿರುವುದು ನಿರಾಶೆ ತಂದಿದೆ’ ಎಂದು ತಿಳಿಸಿದ್ದಾರೆ.
‘ಭಾರತದಲ್ಲಿ ಆಯವ್ಯಯ ಕೇವಲ ಸರ್ಕಾರದ ಆಶಯ ತಿಳಿಸುವ ದಾಖಲೆಯಲ್ಲ. ಆಯವ್ಯಯ ಭಾಷಣ ಜನರಿಗೆ ಮಾಹಿತಿ ಒದಗಿಸುವ ಪ್ರಮುಖ ಮಾಧ್ಯಮ. ಈ ಆಯವ್ಯಯದಲ್ಲಿ ಕೆಲವು ಉದ್ದೇಶಗಳನ್ನು ಉಲ್ಲೇಖಿಸಲಾಗಿದೆಯೇ ಹೊರತು ಯಾವುದೇ ಮಾಹಿತಿ ಇಲ್ಲ. ಅದರಲ್ಲಿಯೂ ರೈಲ್ವೆ ಯೋಜನೆಗಳ ಕುರಿತು ಯಾವುದೇ ನಿಖರ ಮಾಹಿತಿ ಇಲ್ಲ’ ಎಂದು ಆಕ್ಷೇಪಿಸಿದ್ದಾರೆ.