ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಸಿಕ್ಕಿಲ್ಲವೆಂಬ ಕಾರಣಕ್ಕೆ ಮುನಿಸಿಕೊಂಡಿದ್ದ ಎಚ್.ಟಿ. ಸಾಂಗ್ಲಿಯಾನ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.
ಮಾಜಿ ಸಂಸದರೂ ಆಗಿರುವ ಸಾಂಗ್ಲಿಯಾನ, ಕೆಪಿಸಿಸಿ ಉಪಾಧ್ಯಕ್ಷ ಸ್ಥಾನ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸೋಮವಾರ ರಾಜೀನಾಮೆ ಪತ್ರ ಕಳುಹಿಸಿದ್ದಾರೆ.
ಬೆಂಗಳೂರು ಕೇಂದ್ರ ಕ್ಷೇತ್ರದಿಂದ ಸಾಂಗ್ಲಿಯಾನ ಟಿಕೆಟ್ ನಿರೀಕ್ಷಿಸಿದ್ದರು. ಸಂಭವನೀಯ ಅಭ್ಯರ್ಥಿಗಳ ಅವರ ಪಟ್ಟಿಯಲ್ಲಿ ಹೆಸರೂ ಇತ್ತು. ಆದರೆ, ಕೊನೆಕ್ಷಣದಲ್ಲಿ ರಿಜ್ವಾನ್ ಅರ್ಷದ್ ಅವರಿಗೆ ಟಿಕೆಟ್ ನೀಡಿದ್ದರಿಂದ ಬೇಸರಗೊಂಡಿದ್ದರು.
‘ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಒಂದರಲ್ಲೂ ಕ್ರೈಸ್ತ ಸಮುದಾಯಕ್ಕೆ ಟಿಕೆಟ್ ನೀಡಿಲ್ಲ. ಆ ಮೂಲಕ, ಅಲ್ಪಸಂಖ್ಯಾತ ಸಮುದಾಯವನ್ನು ಹೈಕಮಾಂಡ್ ಮತ್ತು ರಾಜ್ಯ ಕಾಂಗ್ರೆಸ್ ನಾಯಕತ್ವ ಸಂಪೂರ್ಣ ನಿರ್ಲಕ್ಷಿಸಿದೆ. ಇದು ಇಡೀ ಸಮುದಾಯಕ್ಕೆ ಬೇಸರ ತಂದಿದೆ’ ಎಂದೂ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.