ಕಲಬುರ್ಗಿ: ‘ದೇಶದಲ್ಲಿ ಅಗತ್ಯಕ್ಕಿಂತ ಹೆಚ್ಚೇ ನಗದು ಇದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳುತ್ತಾರೆ. ಆದರೆ, ಆ ಎಲ್ಲ ನೋಟುಗಳು ಎಲ್ಲಿ ಹೋಗುತ್ತಿವೆ’ ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಆಡಳಿತ ಸಂಪೂರ್ಣ ನಿಷ್ಕ್ರಿಯಗೊಂಡಿದೆ. ಬ್ಯಾಂಕ್, ಎಟಿಎಂಗಳಲ್ಲಿ ಹಣವೇ ಸಿಗುತ್ತಿಲ್ಲ. ನೋಟು ರದ್ದತಿಯಿಂದ ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುವಂತಾಗಿದೆ’ ಎಂದು ಆರೋಪಿಸಿದರು.
ಜಾದೂ ನಡೆಯಲ್ಲ: ‘ರಾಜ್ಯದಲ್ಲಿ ಅಮಿತ್ ಶಾ ಜಾದೂ ನಡೆಯುವುದಿಲ್ಲ. ಕರ್ನಾಟಕದಲ್ಲಿ ಕಳೆದ ಬಾರಿಗಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ಬಿಜೆಪಿಯವರ ಕಾಂಗ್ರೆಸ್ ಮುಕ್ತ ಭಾರತ ಆಶಯಕ್ಕೆ ಕರ್ನಾಟಕದಿಂದಲೇ ತಡೆವೊಡ್ಡಲು ರಣತಂತ್ರ ರೂಪಿಸಿದ್ದೇವೆ. ಹೀಗಾಗಿ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.