ಉಜಿರೆ: ಹೊಂಬುಜ ಜೈನ ಮಠದಿಂದ ನೀಡಲಾಗುವ ಸಿದ್ಧಾಂತ ಕೀರ್ತಿ ಪ್ರಶಸ್ತಿಗೆ ಎಸ್.ಡಿ.ಎಂ. ಕಾಲೇಜಿನಲ್ಲಿರುವ ಡಾ. ಹಾಮಾನಾ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಎಸ್.ಡಿ.ಶೆಟ್ಟಿ ಆಯ್ಕೆಯಾಗಿದ್ದಾರೆ ಎಂದು ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ತಿಳಿಸಿದ್ದಾರೆ.
ಪ್ರಶಸ್ತಿ ₹35 ಸಾವಿರ ನಗದು ಮತ್ತು ಫಲಕವನ್ನೊಳಗೊಂಡಿದ್ದು, ಇದೇ 26ರಂದು ಹೊಂಬುಜ ಜೈನಮಠದಲ್ಲಿ ನಡೆಯುವ ಧಾಮಿಕ ಸಭೆಯಲ್ಲಿ ಪ್ರಶಸ್ತಿ ನೀಡಿ ಡಾ. ಎಸ್.ಡಿ. ಶೆಟ್ಟಿ ಅವರನ್ನು ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ.
ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ 30 ವರ್ಷ ಕಾಲ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಡಾ. ಎಸ್.ಡಿ.ಶೆಟ್ಟಿ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಹಳದೀಪುರದವರು. ಕನ್ನಡ ಸಾಹಿತ್ಯ, ಸಂಶೋಧನೆ, ವಿಮರ್ಶೆ, ಗ್ರಂಥ ಸಂಪಾದನೆ, ಶಾಸನ ಅಧ್ಯಯನದಲ್ಲಿ ಪರಿಣತರು.
ಧರ್ಮಸ್ಥಳದಲ್ಲಿರುವ ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನ ಮತ್ತು ಮಂಜೂಷಾ ವಸ್ತು ಸಂಗ್ರಹಾಲಯ ಹಾಗೂ ಉಜಿರೆಯಲ್ಲಿರುವ ಡಾ. ಹಾಮಾನಾ ಸಂಶೋಧನಾ ಕೇಂದ್ರದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.