ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಮೋದಿ ಕರ್ನಾಟಕದಲ್ಲಿ ಸ್ಪರ್ಧಿಸಲಿ: ಸಿದ್ದರಾಮಯ್ಯ ಸವಾಲು

Last Updated 12 ಫೆಬ್ರುವರಿ 2019, 11:16 IST
ಅಕ್ಷರ ಗಾತ್ರ

ಹುಬ್ಬಳ್ಳಿ:ಮುಂಬರುವ ಲೋಕಸಭಾ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಿಂದ ಸ್ಪರ್ಧಿಸಲಿ ಎಂದು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಸವಾಲು ಹಾಕಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 22 ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂದು ಬಿಜೆಪಿ ಹೇಳುತ್ತಿದೆ. ಮೋದಿ ಅವರು ರಾಜ್ಯದಿಂದ ಸ್ಪರ್ಧಿಸಲಿ ಮತ್ತು ವಾಸ್ತವವನ್ನು ಅವರು ತಿಳಿದುಕೊಳ್ಳಲಿ ಎಂದು ಹೇಳಿದರು.

ಇಲ್ಲಿನ ವಿಮಾನನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯ ಸರ್ಕಾರದ ಸಾಲ ಮನ್ನಾ ಯೋಜನೆ ಟೀಕಿಸುವ ಪ್ರಧಾನಿ ನರೇಂದ್ರ ಮೋದಿ ತಾವೇಕೆ ಸಾಲ ಮನ್ನಾ ಮಾಡಿಲ್ಲ. ಅವರು ಬರೀ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ’ ಎಂದು ಸಿದ್ದರಾಮಯ್ಯ ಟೀಕಿಸಿದರು.

‘ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಸಾಲ ಮನ್ನಾ ಮಾಡುವಂತೆ ಎರಡು ಬಾರಿ ನಿಯೋಗ ತೆಗೆದುಕೊಂಡು ಹೋಗಿದ್ದೆ. ಆದರೂ ಅವರು ಸ್ಪಂದಿಸಿಲ್ಲ. ನಾವು ಈಗಾಗಲೇ ಸಾಲ ಮನ್ನಾ ಪ್ರಕ್ರಿಯೆಯನ್ನು ಆರಂಭಿಸಿದ್ದೇವೆ. ಅದಕ್ಕಾಗಿ ಪ್ರಸ್ತುತ ಬಜೆಟ್‌ನಲ್ಲಿ ಹಣವನ್ನೂ ಮೀಸಲಾಗಿಟ್ಟಿದ್ದೇವೆ’ ಎಂದರು.

‘ಗುರುಮಠಕಲ್‌ ಶಾಸಕ ನಾಗನಗೌಡ ಅವರ ಪುತ್ರ ಶರಣಗೌಡ ಅವರೊಂದಿಗೆ ಮಾತನಾಡಿದ್ದು ತಾವಲ್ಲ. ಯಾರೋ ಮಿಮಿಕ್ರಿ ಮಾಡಿದ್ದಾರೆ ಅಂದಿದ್ದ ಯಡಿಯೂರಪ್ಪ ಈಗ ಅದು ತಮ್ಮದೇ ಧ್ವನಿ ಎಂದು ಒಪ್ಪಿಕೊಂಡಿದ್ದಾರೆ. ಧ್ವನಿ ತಮ್ಮದೆಂದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವೆ ಎಂದಿದ್ದರು. ಈಗ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಲಿ’ ಎಂದು ಹೇಳಿದರು.

‘ನಿಮ್ಮಪ್ಪನಿಗೆ ₹ 10 ಕೋಟಿ ಕೊಡ್ತೀವಿ. ಮಂತ್ರಿ ಮಾಡ್ತೀವಿ. ನಿನಗೆ ಟಿಕೆಟ್‌ ಕೊಡ್ತೀವಿ ಎಂದು ಶರಣಗೌಡರಿಗೆ ಹೇಳಿದ್ದರು. ಇದು ಕುದುರೆ ವ್ಯಾಪಾರ ಅಲ್ವಾ? ಮುಖ್ಯಮಂತ್ರಿ ಆಗಿದ್ದ ಯಡಿಯೂರಪ್ಪ ಈಗ ಶಾಸಕರನ್ನು ಕೊಂಡುಕೊಳ್ಳಲು ಹೊರಟಿದ್ದಾರೆ. ಅವರು ಸಾರ್ವಜನಿಕ ಜೀವನದಲ್ಲಿ ಇರಲು ನಾಲಾಯಕ್‌’ ಎಂದು ಹರಿಹಾಯ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT