ಎರಡೂ ಪಕ್ಷಗಳಿಗೂ ಸದ್ಯಕ್ಕೆ ವಿರುದ್ಧವಾಗಿರುವ ಬಿಜೆಪಿಯನ್ನು ಸೋಲಿಸಲು ಉಭಯ ಪಕ್ಷಗಳ ನಾಯಕರು ಪಣ ತೊಟ್ಟಿದ್ದಾರೆ. ಮೂರು ಲೋಕಸಭಾ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯತ್ತಿರುವ ಉಪಚುನಾವಣೆಗಳಲ್ಲಿ ಜಂಟಿಯಾಗಿ ಕಾರ್ಯತಂತ್ರ ಹೆಣೆಯುತ್ತಿದ್ದಾರೆ. ಆದರೆ, ತಳಮಟ್ಟದಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರ ಮಧ್ಯೆ ಸಾಕಷ್ಟು ವೈರುಧ್ಯವಿದೆ. ರಾಜ್ಯಮಟ್ಟದಲ್ಲಿ ಮಾಡಿಕೊಂಡಿರುವ ಮೈತ್ರಿ ಕುರಿತು ಅಸಮಾಧಾನ ಇದೆ. ಮಂಡ್ಯ, ಶಿವಮೊಗ್ಗದಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸದೇ, ಜೆಡಿಎಸ್ಗೆ ಬಿಟ್ಟುಕೊಟ್ಟ ಕಾಂಗ್ರೆಸ್ ನಾಯಕತ್ವದ ಬಗ್ಗೆ ಅಸಹನೆಯೂ ಇದೆ. ಇವೆಲ್ಲಕ್ಕೆ ತೇಪೆ ಹಾಕಲು ನಾಯಕರು ಈಗ ಮುಂದಾಗಿದ್ದಾರೆ. ಎರಡು ಲೋಕಸಭೆ ಮತ್ತು ಒಂದು ವಿಧಾನಸಭೆ ಕ್ಷೇತ್ರದಲ್ಲಿ ಜೆಡಿಎಸ್, ತಲಾ ಒಂದು ಲೋಕಸಭೆ ಮತ್ತು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿವೆ. ಎಲ್ಲ ಕ್ಷೇತ್ರಗಳನ್ನು ಗೆಲ್ಲಲೇ ಬೇಕೆಂದು ಪಣ ತೊಟ್ಟಿರುವ ನಾಯಕರು ಎಚ್ಚರ ವಹಿಸಲು ನಿರ್ಧರಿಸಿದ್ದಾರೆ.