ಮಂಗಳೂರು:ಪ್ರಧಾನಿ ನರೇಂದ್ರ ಮೋದಿ ಕಾಲದಲ್ಲೇ ಭಾರತ ಹೆಚ್ಚು ಯೋಧರನ್ನು ಕಳೆದುಕೊಂಡಿದೆ. ಆದರೆ, ಸತ್ಯ ಮರೆಮಾಚಲು ವಿರೋಧ ಪಕ್ಷಗಳ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ನಗರದ ಹೊರವಲಯದ ಅಡ್ಯಾರ್ ಗಾರ್ಡನ್ನಲ್ಲಿ ಕೆಪಿಸಿಸಿ ವತಿಯಿಂದ ಬುಧವಾರ ಆಯೋಜಿಸಿದ್ದ ಪರಿವರ್ತನಾ ಯಾತ್ರೆ ಉದ್ಘಾಟಿಸಿ ಮಾತನಾಡಿದರು.
ಪುಲ್ವಾಮಾದಲ್ಲಿ 49 ಯೋಧರ ಸಾವಿಗೆ ಕೇಂದ್ರ ಸರ್ಕಾರದ ವೈಫಲ್ಯವೇ ಕಾರಣ. ಗುಪ್ತಚರ ಇಲಾಖೆ, ರಾ ಎಲ್ಲಿ ಹೋಗಿದ್ದವು? ದಾಳಿಯ ಸಾಧ್ಯತೆ ಕುರಿತ ಎಚ್ಚರಿಕೆಯನ್ನು ಏಕೆ ಹಗುರವಾಗಿ ಪರಿಗಣಿಸಿದರು? ಇದು ನಿಶ್ಚಿತವಾಗಿ ಕೇಂದ್ರ ಸರ್ಕಾರದ ವೈಫಲ್ಯದಿಂದ ಆದ ಹಾನಿ ಎಂದು ಟೀಕಿಸಿದರು.
ಯಾವುದೇ ಪಕ್ಷದ ಸರ್ಕಾರ ಇರಲಿ. ಯೋಧರ ಹೆಣಗಳನ್ನು ರಾಜಕೀಯಕ್ಕೆ ಬಳಸುವುದು ನೀಚತನ. ಯೋಧರ ಸಾವಿನಿಂದ ರಾಜಕೀಯ ಲಾಭ ಪಡೆಯಲು ಯತ್ನಿಸುವುದು ಅಕ್ಷಮ್ಯ. ನರೇಂದ್ರ ಮೋದಿ ಇಂತಹ ಹೀನ ರಾಜಕಾರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇಂದಿರಾ ಗಾಂಧಿ ಪ್ರಧಾನಿ ಆಗಿದ್ದ ಕಾಲದಲ್ಲಿ 1965 ಮತ್ತು 1971ರಲ್ಲಿ ಭಾರತೀಯ ಸೇನೆ ಪಾಕಿಸ್ತಾನವನ್ನು ಸೋಲಿಸಿತ್ತು. ಇಂದಿರಾ ಗಾಂಧಿ ಇದಕ್ಕೆ ಕಾರಣ. ಆದರೆ, ಕಾಂಗ್ರೆಸ್ ಪಕ್ಷ ಯಾವತ್ತೂ ಅದನ್ನು ರಾಜಕೀಯ ಲಾಭಕ್ಕೆ ಬಳಸಲಿಲ್ಲ ಎಂದರು.