ಮೈಸೂರು: ‘ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದು ಬೇಡ ಎಂಬ ವಾದ ಸರಿಯಲ್ಲ. ಸರ್ಕಾರ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಪರೀಕ್ಷೆ ನಡೆಸಲಿ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಖಾಸಗಿ ಶಾಲೆಗಳು ಶುಲ್ಕವನ್ನು ಕಡಿಮೆ ಮಾಡಬೇಕೆಂಬ ಅಭಿಪ್ರಾಯದ ಬಗ್ಗೆ ಪ್ರತಿಕ್ರಿಯಿಸಿ, ‘ಖಾಸಗಿ ಶಾಲೆಗಳಲ್ಲಿ ಶ್ರೀಮಂತರ ಮಕ್ಕಳು ಮಾತ್ರ ಇರುವುದಿಲ್ಲ; ಬಡವರ ಮಕ್ಕಳೂ ಇದ್ದಾರೆ. ಆದ್ದರಿಂದ ಶುಲ್ಕದ ವಿಚಾರವನ್ನು ಸರ್ಕಾರ ಪರಿಶೀಲನೆ ಮಾಡಬೇಕು’ ಎಂದು ತಿಳಿಸಿದರು.
ಕೀಳುಮಟ್ಟದ ರಾಜಕಾರಣ: ‘ಡಿ.ಕೆ.ಶಿವಕುಮಾರ್ ಪದಗ್ರಹಣ ವಿಚಾರದಲ್ಲಿ ರಾಜ್ಯ ಸರ್ಕಾರ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ಈ ರೀತಿಯ ರಾಜಕಾರಣ ನಿರೀಕ್ಷೆ ಮಾಡಿರಲಿಲ್ಲ. ಕಾಂಗ್ರೆಸ್ ಪಕ್ಷ ಸಂಘಟನೆ ಆಗುತ್ತದೆ ಎಂಬ ಆತಂಕ ಬಿಜೆಪಿಯನ್ನು ಕಾಡುತ್ತಿದೆ’ ಎಂದು ಅಸಮಾಧಾನ ಹೊರಹಾಕಿದರು.