ತೆಲಸಂಗ (ಅಥಣಿ ತಾಲ್ಲೂಕು): ‘ಡಿ.9ರ ನಂತರ ರಾಜ್ಯದಲ್ಲಿ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಅಥಣಿ ಕ್ಷೇತ್ರದ ತೆಲಸಂಗ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಜಾನನ ಮಂಗಸೂಳಿ ಪರವಾಗಿ ಶುಕ್ರವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಷ್ಟೇ ಹಣ ಖರ್ಚು ಮಾಡಿದರೂ, ಎಷ್ಟೇ ಸುತ್ತು ಹೊಡೆದರೂ 15 ಕ್ಷೇತ್ರಗಳಲ್ಲೂ ನಾವೇ ಗೆಲ್ಲುತ್ತೇವೆ. ಇದು ಅತಿಶಯೋಕ್ತಿಯೇನಲ್ಲ; ಬಹಳ ವಿಶ್ವಾಸದಿಂದ ಹೇಳುತ್ತಿದ್ದೇನೆ’ ಎಂದರು.
‘ಯಡಿಯೂರಪ್ಪ ಬಹಳ ಸುಳ್ಳು ಹೇಳುವುದನ್ನು ಕಲಿತುಕೊಂಡಿದ್ದಾರೆ. ನಾನು ಅಕ್ಕಿ ಕೊಟ್ಟ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಕೊಟ್ಟರು ಎಂದು ಹೇಳುತ್ತಿದ್ದಾರೆ. ಹಾಗಿದ್ದರೆ ಮೋದಿ ತವರು ಗುಜರಾತ್ನಲ್ಲಿ ಉಚಿತವಾಗಿ ಅಕ್ಕಿ ಕೊಡುತ್ತಿಲ್ಲವೇಕೆ?’ ಎಂದು ಕೇಳಿದರು.