ಶನಿವಾರಸಂತೆ: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಬಗ್ಗೆ ಫೇಸ್ಬುಕ್ನಲ್ಲಿ ಅವಹೇಳನಕಾರಿ ಬರಹ ಪೋಸ್ಟ್ ಮಾಡಿರುವ ಮನೀಶ್ ಮಣಿಕಂಠ ಎಂಬುವರ ವಿರುದ್ಧ ಶನಿವಾರಸಂತೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಶಿಡಿಗಳಲೆ ಗ್ರಾಮದ ಬೆಳೆಗಾರ ಎಸ್.ಎಂ.ಉಮಾಶಂಕರ್, ಗುಡುಗಳಲೆ ಗ್ರಾಮದ ಬಜರಂಗದಳ ಸಂಚಾಲಕ ಜಿ.ಬಿ.ದಿಲೀಪ್ ದೂರು ನೀಡಿದ್ದಾರೆ.
‘ಚೆನ್ನೈನ ಆಸ್ಪತ್ರೆಯಲ್ಲಿ ಸ್ವಾಮೀಜಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಜಾತಿಭೇದವಿಲ್ಲದೆ ಲಕ್ಷಾಂತರ ಮಕ್ಕಳಿಗೆ ವಿದ್ಯಾದಾನ ಮಾಡುತ್ತಿದ್ದಾರೆ. ಅಂತಹ ಶ್ರೇಷ್ಠ ವ್ಯಕ್ತಿಯ ವಿರುದ್ಧ ಅವಹೇಳನಕಾರಿ ಬರಹಗಳನ್ನು ಪೋಸ್ಟ್ ಮಾಡಿರುವುದು ಸ್ವಾಮೀಜಿ ಅನುಯಾಯಿಗಳಿಗೆ ಬೇಸರ ತರಿಸಿದೆ. ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಪೋಸ್ಟ್ ಹಾಕಿರುವ ಮನೀಶ್ ಮಣಿಕಂಠ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಸೋಮವಾರಪೇಟೆ ವರದಿ: ಸ್ವಾಮೀಜಿ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ಪೋಸ್ಟ್ ಮಾಡಿರುವ ಮನೀಶ್ ಮಣಿಕಂಠ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಬಿ.ಧರ್ಮಪ್ಪ, ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಮಹೇಶ್ ಆಗ್ರಹಿಸಿದ್ದಾರೆ.