ಬೆಂಗಳೂರು: ಮಾದಕ ವಸ್ತುಗಳ ಹಾವಳಿ ನಿಯಂತ್ರಿಸಲು ವಿಶೇಷ ಪೊಲೀಸ್ ತಂಡ ರಚಿಸಿ, ಕ್ಷಿಪ್ರ ಕಾರ್ಯಾಚರಣೆ ನಡೆಸುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಾದಕವಸ್ತು ವಿರೋಧಿ ದಿನಾಚರಣೆ ಕುರಿತು ಸುದ್ದಿಗೋಷ್ಠಿಯಲ್ಲಿಶುಕ್ರವಾರ ಮಾತನಾಡಿದ ಅವರು, ‘ಬೆಂಗಳೂರು ನಗರ ಸಿಕ್ಕಾ ಪಟ್ಟೆ ಬೆಳೆಯುತ್ತಿದ್ದು, ಹೊರರಾಜ್ಯ ಮತ್ತು ದೇಶಗಳಿಂದ ಬಂದ ಕೆಲವು ವಿದ್ಯಾರ್ಥಿಗಳು ಈ ದುಶ್ಚಟಕ್ಕೆ ಬಲಿಯಾಗುತ್ತಿದ್ದಾರೆ’ ಎಂದು ಆತಂಕ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳು ಮಾದಕ ವಸ್ತುಗಳ ದಾಸರಾಗುವುದನ್ನು ತಪ್ಪಿಸುವ ಉದ್ದೇಶದಿಂದ ಎಲ್ಲ ಶಾಲಾ– ಕಾಲೇಜುಗಳ ಆಡಳಿತ ಮಂಡಳಿ ಸಭೆ ಕರೆದು ಚರ್ಚಿಸುವಂತೆ ಶಿಕ್ಷಣ ಸಚಿವರಿಗೆ ಮನವಿ ಮಾಡಿರುವುದಾಗಿ ತಿಳಿಸಿದರು.
‘ಶಾಲಾ–ಕಾಲೇಜು ಆಡಳಿತ ಮಂಡಳಿಗಳು ವಿದ್ಯಾರ್ಥಿಗಳ ಮೇಲೆ ನಿಗಾ ವಹಿಸಬೇಕು. ಪೋಷಕರೂ ಮಕ್ಕಳ ಮೇಲೆ ಕಣ್ಣಿಡಬೇಕು’ ಎಂದು ಅವರು ಸಲಹೆ ನೀಡಿದರು.
ಮಾದಕ ವಸ್ತು ಕಳ್ಳಸಾಗಣೆದಾರರ ವಿರುದ್ಧ ಟೋಲ್ಫ್ರೀ ನಂಬರ್ 1098ಕ್ಕೆ ಮಾಹಿತಿ ನೀಡಬಹುದು. ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.