ಚಿಕ್ಕಬಳ್ಳಾಪುರ: ಆಗಸ್ಟ್ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಜುಲೈ ಅಂತ್ಯದ ವೇಳೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗಲಿವೆ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.
ಜಿಲ್ಲೆಯಲ್ಲಿ ಸೋಮವಾರ ವಿವಿಧ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಕೇಂದ್ರ ಸರ್ಕಾರದ ಮಾರ್ಗಸೂಚಿ ಗಮನದಲ್ಲಿಟ್ಟುಕೊಂಡು, ಶಿಕ್ಷಣ ತಜ್ಞರ ಅಭಿಪ್ರಾಯ ಪಡೆದ ಬಳಿಕವಷ್ಟೇ ರಾಜ್ಯದಲ್ಲಿ ಯಾವ ರೀತಿಯಲ್ಲಿ ಆನ್ ಲೈನ್ ಶಿಕ್ಷಣ ಜಾರಿಗೆ ತರಬೇಕು ಎನ್ನುವುದರ ಕುರಿತು ನಿರ್ಧರಿಸುತ್ತೇವೆ ಎಂದು ಹೇಳಿದರು.
ಎಲ್ಕೆಜಿ ಹಾಗೂ ಯುಕೆಜಿಗೆ ಆನ್ ಲೈನ್ ಶಿಕ್ಷಣ ಜಾರಿಮಾಡುವುದಿಲ್ಲ. ಆದರೆ, ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಯಾವ ತಂತ್ರಜ್ಞಾನ ಬಳಸಿ ಬೋಧನೆ ಮಾಡಬಹುದು ಎಂಬುದರ ಬಗ್ಗೆ ತಜ್ಞರ ಸಮಿತಿ ನೀಡುವ ವರದಿ ಆಧರಿಸಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.
ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ವಿದ್ಯಾರ್ಥಿಗಳ ಗೈರುಹಾಜರಿಯಲ್ಲಿ ಅಷ್ಟೊಂದು ವ್ಯತ್ಯಾಸವಾಗಿಲ್ಲ ಎಂದು ಹೇಳಿದರು.
ಸುರೇಶ್ ಕುಮಾರ್ ಅವರು ನಗರದ ಬಿ.ಬಿ ರಸ್ತೆಯಲ್ಲಿರುವ ಸರ್ಕಾರಿ ಪ್ರೌಢ ಶಾಲೆ, ಬಿಜಿಎಸ್, ನ್ಯೂ ಹೊರೈಜಾನ್, ಸಂತ ಜೋಸೆಫ್ ಬಾಲಕಿಯರ ಪ್ರೌಢಶಾಲೆ ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಸಚಿವರಿಗೆ ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣ ಸ್ವಾಮಿ ಸಾಥ್ ನೀಡಿದರು.