ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ | ಜಿಲ್ಲಾಡಳಿತಗಳಿಗೆ ಸವಾಲು-ಅವಕಾಶ: ಸುರೇಶ್ ಕುಮಾರ್

ಡಿಸಿ, ಜಿಪಂ ಸಿಇಒ, ಎಸ್‍ಪಿ, ಖಜಾನೆ ಅಧಿಕಾರಿಗಳು, ಡಿಡಿಪಿಐಗಳೊಂದಿಗೆ ವಿಡಿಯೊ ಸಂವಾದ
Last Updated 4 ಜೂನ್ 2020, 9:54 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಕಾಲಘಟ್ಟದಲ್ಲಿ ಹಾಗೂ ಹೈಕೋರ್ಟ್ ಕಣ್ಗಾವಲಿನಲ್ಲಿ ನಡೆಯತ್ತಿರುವ ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಸುಗಮ ನಿರ್ವಹಣೆಯನ್ನು ಜಿಲ್ಲಾಡಳಿತಗಳು ಸವಾಲು ಮತ್ತು ಅವಕಾಶಗಳೆಂದು ಭಾವಿಸಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಪ್ರ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚಿಸಿದ್ದಾರೆ.

ಇದೇ 25ರಿಂದ ನಡೆಯುತ್ತಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳ ಸುಗಮ ನಿರ್ವಹಣೆ ಹಿನ್ನೆಲೆಯಲ್ಲಿ ಗುರುವಾರ ವಿಕಾಸಸೌಧದಲ್ಲಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಎಸ್‍ಪಿ, ಜಿಲ್ಲಾ ಮತ್ತು ತಾಲೂಕು ಖಜಾನೆ ಅಧಿಕಾರಿಗಳು, ಡಿಡಿಪಿಐ, ಬಿಇಒರೊಂದಿಗೆ ವಿಡಿಯೊ ಸಂವಾದ ನಡೆಸಿದ ಅವರು, ತಂತಮ್ಮ ಜಿಲ್ಲೆಯ ಕೊರೊನಾ ಸೇನಾನಿಗಳ ನೇತೃತ್ವ ವಹಿಸಿ ಕೊರೊನಾ ಎದುರಿಸಿದಂತೆ ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ಸಮರ್ಪಕವಾಗಿ ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಕೈಗೊಳ್ಳುವಲ್ಲಿ ತಮ್ಮೆಲ್ಲರ ಪಾತ್ರ ಅತ್ಯಂತ ಮಹತ್ವದಾಗಿದೆ ಎಂದು ಹೇಳಿದರು.

ಈ ಬಾರಿಯ ಪರೀಕ್ಷೆ ಹೈಕೋರ್ಟ್ ಸ್ಪಷ್ಟ ಆದೇಶದಂತೆ ಶಿಕ್ಷಣ, ಆರೋಗ್ಯ, ಗೃಹ ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳ ಸಮನ್ವಯದಲ್ಲಿ ನಡೆಯುತ್ತಿರುವುದರಿಂದ ಯಾವುದೇ ಒಬ್ಬ ವಿದ್ಯಾರ್ಥಿಯೂ ಯಾವುದೇ ಕಾರಣದಿಂದಲೂ ಪರೀಕ್ಷೆಯಿಂದ ವಂಚಿತವಾಗದಂತೆ ಹಾಗೂ ಪ್ರತಿ ವಿದ್ಯಾರ್ಥಿಯೂ ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ಬರೆಯುವಂತೆ ಮಾಡುವಲ್ಲಿ ಜಿಲ್ಲಾಡಳಿತದ ಹೊಣೆಗಾರಿಕೆ ಈ ಬಾರಿ ಎಂದಿಗಿಂತ ಹೆಚ್ಚಾಗಿದ್ದು, ಅದಕ್ಕಾಗಿ ಸಮರೋಪಾದಿಯಲ್ಲಿ ಈಗಿನಿಂದಲೇ ಎಲ್ಲ ಪರೀಕ್ಷಾ ಪೂರ್ವ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಕೆಲ ಪಟ್ಟಭದ್ರ ಹಿತಾಸಕ್ತಿಗಳು, ಪರೀಕ್ಷೆ ವಿರೋಧಿಗಳು, ವದಂತಿ ಕೋರರಂತಹ ವ್ಯಕ್ತಿಗಳು ಪರೀಕ್ಷೆ ಕುರಿತಂತೆ ಮಕ್ಕಳಲ್ಲಿ ಗೊಂದಲ ಮೂಡಿಸುವ ಸಾಧ್ಯತೆಗಳಿರುವುದರಿಂದ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಈ ಮೊದಲೇ ಅಂತಹ ವ್ಯಕ್ತಿಗಳನ್ನು ಗಮನಿಸಿ ಅಗತ್ಯ ಕ್ರಮ ಕೈಗೊಳ್ಳಬೇಕಾದ ಅಗತ್ಯವನ್ನೂ ಸಚಿವರು ವಿವರಿಸಿ, ಪರೀಕ್ಷಾ ಕೇಂದ್ರದ ಬಳಿ ಅವರು ಸುಳಿದಾಡಿ, ಚೆನ್ನಾಗಿ ಓದಿ ಪರೀಕ್ಷೆಗೆ ಸಜ್ಜಾಗಿ ಬಂದ ಪರೀಕ್ಷಾರ್ಥಿಗಳಲ್ಲಿ ಆತ್ಮವಿಶ್ವಾಸ ಕದಡುವಂತಹ ಸಾಧ್ಯತೆಗಳಿರುವ ಕಾರಣ ಪರೀಕ್ಷಾ ಕೇಂದ್ರ ಮತ್ತು ಉತ್ತರ ಪತ್ರಿಕೆಗಳ ಸಂಗ್ರಹಣಾ ಕೇಂದ್ರಗಳನ್ನು ಚುನಾವಣಾ ಸ್ಟ್ರಾಂಗ್‍ರೂಮ್‍ಗಳಿಗೆ ಕೈಗೊಳ್ಳುವ ಎಲ್ಲ ಕ್ರಮಗಳನ್ನೂ ಕೈಗೊಳ್ಳಬೇಕೆಂದು ಸುರೇಶ್ ಕುಮಾರ್ ಸೂಚನೆ ನೀಡಿದರು.

ಜಿಲ್ಲಾಡಳಿತಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಕುರಿತಂತೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೂಡಲೇ ಸಹಾಯವಾಣಿ ಪ್ರಾರಂಭಿಸಿ ಈ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು. ಈಗಾಗಲೇ ಪರೀಕ್ಷಾ ಕೇಂದ್ರದಲ್ಲಿ ಎಲ್ಲ ರೀತಿಯ ಅಂತಿಮ ಸಿದ್ಧತೆಗಳಾಗಿರುವ ಕೊನೇ ಸಂದರ್ಭದಲ್ಲಿ ಕಂಟೈನ್‍ಮೆಂಟ್ ವಲಯಗಳಾಗಿ ಘೋಷಿತವಾದರೆ ತಕ್ಷಣದ ಅನುಕೂಲಕ್ಕಾಗಿ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಬದಲಿ ಐದು ಕೇಂದ್ರಗಳನ್ನು ಗುರುತಿಸಿ ಸಿದ್ಧವಾಗಿಟ್ಟುಕೊಳ್ಳಬೇಕು. ಮಳೆಗಾಲದಲ್ಲಿ ಪರೀಕ್ಷೆ ನಡೆಯುತ್ತಿರುವುದರಿಂದ ಈಗಾಗಲೇ ಗುರುತಿಸಲಾದ ಪರೀಕ್ಷಾ ಕೇಂದ್ರಗಳನ್ನು ಪರಿಶೀಲಿಸಿ ಪರ್ಯಾಯ ಕೇಂದ್ರಗಳ ಅಗತ್ಯವಿದ್ದರೆ ಸಿದ್ಧಪಡಿಸಿಟ್ಟುಕೊಳ್ಳಬೇಕು.

ಮಕ್ಕಳಿಗೆ ಮಳೆ ಇರುಚಲಿನಿಂದ ನೀರು ಸೋಕುವಂತಿದ್ದರೆ ತಕ್ಷಣವೇ ಆ ಕೊಠಡಿಗಳನ್ನು ಬದಲಿಸುವುದು, ಮಳೆಗಾಲದಲ್ಲಿ ವಿದ್ಯುತ್ ಕೈಕೊಡುವುದರಿಂದ ಪರೀಕ್ಷಾ ಕೊಠಡಿಯಲ್ಲಿ ಕತ್ತಲಾಗದಂತೆ ಅದಕ್ಕೆ ಅಗತ್ಯವಾದ ಬೆಳಕಿನ ವ್ಯವಸ್ಥೆಯನ್ನು ಶಾಲಾ ಸಂಚಿತನಿಧಿ ಬಳಸಿ ಪರ್ಯಾಯ ವ್ಯವಸ್ಥೆ ಮಾಡುವುದು, ಪರೀಕ್ಷಾ ಕೇಂದ್ರದ ಸುತ್ತ 144ನೇ ಕಲಂ ನಿಷೇಧಿತ ಪ್ರದೇಶ ಘೋಷಿಸುವುದು, ಕೆಲ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳು ಕ್ವಾರಂಟೈನ್ ಕೇಂದ್ರಗಳಾಗಿದ್ದರೆ, ಜಿಲ್ಲಾಧಿಕಾರಿಗಳು ತಕ್ಷಣವೇ ಅಂತಹ ಕೇಂದ್ರಗಳಲ್ಲಿನ ಕೊರೋನಾ ಶಂಕಿತರನ್ನು ಬೇರೆಡೆಗೆ ಸ್ಥಳಾಂತರಿಸಿ ಅವುಗಳನ್ನು ಸ್ಯಾನಿಟೈಜೇಷನ್ ಮಾಡಿ ತಕ್ಷಣವೇ ಶಿಕ್ಷಣ ಇಲಾಖೆಗೆ ವಹಿಸಬೇಕೆಂದು ಸೂಚಿಸಿದರು.

ವಿಶೇಷವಾಗಿ ದಕ್ಷಿಣಕನ್ನಡ, ಯಾದಗಿರಿ, ಬೆಳಗಾವಿ ಜಿಲ್ಲೆಗಳಂತಹ ಪರೀಕ್ಷಾ ಕೇಂದ್ರಗಳಿಗೆ ಗಡಿಯಾಚೆಯಿಂದ ಬರುವ ಮಕ್ಕಳಿಗೆ ಪರೀಕ್ಷಾ ಕೇಂದ್ರಕ್ಕೆ ಬಂದು ಹೋಗಲು ಸಾರಿಗೆ ವ್ಯವಸ್ಥೆ ಮಾಡುವುದು, ಯಾವುದೇ ಹಳ್ಳಿಯಿಂದ ಪರೀಕ್ಷಾ ಕೇಂದ್ರಕ್ಕೆ ಬರಲು ವಾಹನ ಸೌಕರ್ಯವಿಲ್ಲದ ಮಕ್ಕಳಿಗೆ ಪರೀಕ್ಷೆಗೆ ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ಸಾರಿಗೆ ವ್ಯವಸ್ಥೆ ಮಾಡುವುದು ಮತ್ತು ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಕಾರ್ಯಕರ್ತರು, ಭಾರತ್ ಸ್ಕೌಟ್ಸ್ ಗೈಡ್ಸ್, ಸೇವಾದಳ, ಎನ್‍ಸಿಸಿಯಂತಹ ಸಂಸ್ಥೆಗಳ ಸ್ವಯಂಸೇವಕರುಗಳು ಸೇವೆ ಒದಗಿಸುತ್ತಿದ್ದು, ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸೇಷನ್ ಮಾಡುವುದು, ಸಂಜೆ ಪರೀಕ್ಷೆ ನಂತರ ಡೆಸ್ಕ್‍ಗಳನ್ನು ಸ್ಯಾನಿಟೈಸ್ ಮಾಡುವುದು, ಪರೀಕ್ಷಾ ಕೊಠಡಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಉತ್ತಮವಾದ ಡೆಸ್ಕ್‍ಗಳನ್ನು ಅಳವಡಿಸುವುದು ಸೇರಿದಂತೆ ಪ್ರತಿಯೊಬ್ಬ ಪರೀಕ್ಷಾರ್ಥಿಯೂ ಸುರಕ್ಷತಾ ವಾತಾವರಣದಲ್ಲಿ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಸುರೇಶ್ ಕುಮಾರ್ ಜಿಲ್ಲಾಡಳಿಗಳಿಗೆ ಸೂಚನೆ ನೀಡಿದರು.

ಈ ತನಕ ಹಾಸ್ಟೆಲ್ ವಾಸಿ ಮಕ್ಕಳು, ವಲಸೆ ಕಾರ್ಮಿಕರ ಮಕ್ಕಳು ಮತ್ತು ಗಡಿಯಾಚೆಗಿನ ಒಟ್ಟು 12,674 ಮಕ್ಕಳು ತಮ್ಮ ಸನಿಹದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಂಡಿದ್ದು, ಅವರಿಗೆ ಬದಲಿ ಹಾಲ್‍ಟಿಕೆಟ್ ನೀಡಲಾಗುತ್ತಿದ್ದು, ಅವರಿಗೆಲ್ಲ ತಮ್ಮ ಇಚ್ಛಿತ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಎಲ್ಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಸುರೇಶ್ ಕುಮಾರ್ ವಿವರ ನೀಡಿದರು.

ಪರೀಕ್ಷಾ ಸಿದ್ಧತೆ ಕುರಿತಂತೆ ಈಗಾಗಲೇ ತಾವು ರಾಜ್ಯದ 19 ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಮುಂದಿನ ವಾರದೊಳಗೆ ಉಳಿದ ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಲಿದ್ದೇನೆ. ಈ ಬಾರಿಯ ಪರೀಕ್ಷೆ ಸಂಕ್ರಮಣ ಕಾಲಘಟ್ಟದಲ್ಲಿ ನಡೆಯಲಿರುವುದರಿಂದ ಇಡೀ ಪರೀಕ್ಷೆಗಳು ‘ಇನ್ಸಿಡೆಂಟ್ ಫ್ರೀ’/ಪ್ರಸಂಗ ರಹಿತವಾಗಿ ನಡೆಯವಂತೆ ಜಿಲ್ಲಾಡಳಿತ ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಬೇಕಾದ ಅಗತ್ಯವನ್ನು ಸಚಿವರು ವಿವರವಾಗಿ ತಿಳಿಸಿದರು. ಆಯಾ ಜಿಲ್ಲಾಧಿಕಾರಿಗಳು ತಮ್ಮ ಸಂದೇಹಗಳನ್ನು ನಿವಾರಿಸಿಕೊಂಡರು.

ಪ್ರಾಥಮಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಸಾಶಿಇ ಆಯುಕ್ತ ಡಾ. ಕೆ.ಜಿ.ಜಗದೀಶ್, ಎಸ್‍ಎಸ್‍ಎ ಎಸ್‍ಪಿಡಿ ಡಾ. ಎಂ.ಟಿ. ರೇಜು ಸೇರಿದಂತೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT