ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

20ರ ಬಳಿಕ ಪಿಯು, ಆಗಸ್ಟ್ ಮೊದಲ ವಾರ ಎಸ್ಸೆಸ್ಸೆಲ್ಸಿ ಫಲಿತಾಂಶ: ಸುರೇಶ್‌ ಕುಮಾರ್

ಎಸ್ಸೆಸ್ಸೆಲ್ಸಿ ಕೊನೆಯ ಪರೀಕ್ಷೆಯೂ ಯಶಸ್ವಿಯಾಗಿ ಮುಕ್ತಾಯ
Last Updated 3 ಜುಲೈ 2020, 13:10 IST
ಅಕ್ಷರ ಗಾತ್ರ

ಬೆಂಗಳೂರು: ಎಸ್ಸೆಸ್ಸೆಲ್ಸಿ ಕೊನೆಯ ಪರೀಕ್ಷೆಯೂ ಶುಕ್ರವಾರ ಯಶಸ್ವಿಯಾಗಿ ಕೊನೆಗೊಂಡಿದ್ದು, ಆಗಸ್ಟ್‌ ಮೊದಲ ವಾರ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.

‘ಇದೇ 13ರಿಂದ ಮೌಲ್ಯಮಾಪನ ಆರಂಭವಾಗಲಿದ್ದು, 30ರೊಳಗೆ ಕೊನೆಗೊಳ್ಳಲಿದೆ. ಹೀಗಾಗಿ ಆಗಸ್ಟ್ ಮೊದಲ ವಾರದಲ್ಲೇ ಫಲಿತಾಂಶ ನೀಡುವುದು ಸಾಧ್ಯವಾಗಬಹುದು. ಮೌಲ್ಯಮಾಪನಕ್ಕೆ 55 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ವಿನಾಯಿತಿ ನೀಡಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್ ಶುಕ್ರವಾರ ಸಂಜೆ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿಯಾಗಲು ಕಟ್ಟುನಿಟ್ಟಾಗಿ ಪಾಲಿಸಬೇಕಾದ ಶಿಷ್ಟಾಚಾರಗಳ ಪಟ್ಟಿಯನ್ನು (ಎಸ್‌ಒಪಿ) ಸಿದ್ಧಪಡಿಸಿದ್ದು ಕಾರಣವಾಗಿತ್ತು. ಮೌಲ್ಯಮಾಪನಕ್ಕೆ ಸಹ ಇಂತಹದೇ ಎಸ್‌ಒಪಿ ಸಿದ್ಧಪಡಿಸಲಾಗುವುದು. ಆಗ ಶಿಕ್ಷಕರು ಧೈರ್ಯವಾಗಿ ಮೌಲ್ಯಮಾಪನ ಕೇಂದ್ರಗಳಿಗೆ ಬರುವುದು ಸಾಧ್ಯವಾಗಲಿದೆ’ ಎಂದು ಅವರು ತಿಳಿಸಿದರು.

3ನೇ ವಾರ ದ್ವಿತೀಯ ಪಿಯು ಫಲಿತಾಂಶ: ‘ದ್ವಿತೀಯ ಪಿಯು ಫಲಿತಾಂಶ ಇದೇ ತಿಂಗಳ ಮೂರನೇ ವಾರ ಪ್ರಕಟವಾಗುವ ನಿರೀಕ್ಷೆ ಇದೆ. ಪದವಿ ಅಥವಾ ಇತರ ವೃತ್ತಿಪರ ಕಾಲೇಜುಗಳು ಯಾವಾಗ ಆರಂಭವಾಗುತ್ತದೆ ಎಂಬುದನ್ನು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸುತ್ತದೆ’ ಎಂದು ಸಚಿವರು ಹೇಳಿದರು.

ಶೇ 98.10ರಷ್ಟು ಹಾಜರಾತಿ: ಶುಕ್ರವಾರದ ತೃತೀಯ ಭಾಷಾ ಪರೀಕ್ಷೆಯಲ್ಲಿ 7,76,251 ವಿದ್ಯಾರ್ಥಿಗಳ ಪೈಕಿ 7,61,506 ಮಂದಿ ಹಾಜರಾಗಿದ್ದು, ಶೇ 98.10ರಷ್ಟು ಹಾಜರಾತಿ ದಾಖಲಾಗಿದೆ. ಕಳೆದ ವರ್ಷ ಇದೇ ಪರೀಕ್ಷೆಗೆ ಶೇ 98.76ರಷ್ಟು ಹಾಜರಾತಿ ಇತ್ತು. ಈ ವರ್ಷ ಒಟ್ಟಾರೆಯಾಗಿ ಶೇ 98.06ರಷ್ಟು ಹಾಜರಾತಿ ದಾಖಲಾಗಿದ್ದರೆ, ಕಳೆದ ವರ್ಷ ಶೇ 98.75ರಷ್ಟು ಹಾಜರಾತಿ ಇತ್ತು’ ಎಂದು ಸಚಿವರು ಮಾಹಿತಿ ನೀಡಿದರು.‌

ಕೃತಜ್ಞತೆ: ಯಶಸ್ವಿಯಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ಣಗೊಳಿಸಲು ಸಹಕರಿಸಿದ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಹಾಗೂ ಅಧಿಕಾರಿಗಳಿಗೆ ಸಚಿವ ಸುರೇಶ್‌ ಕುಮಾರ್ ಕೃತಜ್ಞತೆ ಸಲ್ಲಿಸಿದರು.

ಅಂಕಿ ಅಂಶ

ಕೋವಿಡ್‌ ಸೋಂಕಿಗೆ ಒಳಗಾಗಿ ಪರೀಕ್ಷೆಗೆ ಗೈರು ಹಾಜರಾದವರು-32.ಹೋಂ ಕ್ವಾರೆಂಟೈನ್‌ನಿಂದಾಗಿ ಪರೀಕ್ಷೆ ತಪ್ಪಿಸಿಕೊಂಡವರು- 80.ಪರೀಕ್ಷೆಗೆ ಗೈರಾದ ನೆರೆಯ ರಾಜ್ಯದವರು-49. ಪರೀಕ್ಷೆಗೆ ಗೈರಾದ ವಲಸೆ ಕಾರ್ಮಿಕರ ಮಕ್ಕಳು-109.

ಸುರಕ್ಷೆ ಮತ್ತು ಸವಾಲು: ಸುರೇಶ್‌ ಕುಮಾರ್ ಮಾತು

ಪತ್ರಿಕಾಗೋಷ್ಠಿಯಲ್ಲಿ ಸುರೇಶ್‌ ಕುಮಾರ್ ಹೇಳಿದ್ದಿಷ್ಟು...

'ಜೂನ್ 25ರಿಂದ ಜುಲೈ 3ರವರೆಗೆ ನಡೆದ 2019-20ನೇ ಸಾಲಿನಎಸ್ಸೆಸ್ಸೆಲ್ಸಿ ಪರೀಕ್ಷೆಗಳು ವಿದ್ಯಾರ್ಥಿಗಳು, ಪೋಷಕರು, ವಿವಿಧ ಇಲಾಖೆಗಳು ಮತ್ತು ಜಿಲ್ಲಾಡಳಿತಗಳ ಸಹಕಾರದೊಂದಿಗೆ ಅತ್ಯಂತ ಯಶಸ್ವಿಯಾಗಿ ನಡೆದಿವೆ. ಈ ಆರು ದಿನಗಳ ಅವಧಿಯ ಪರೀಕ್ಷೆಗಳಲ್ಲಿ ಪ್ರತಿದಿನ ಸರಾಸರಿ 7.5 ಲಕ್ಷ ವಿದ್ಯಾಥಿಗಳು ಯಾವುದೇ ಸಮಸ್ಯೆಯಿಲ್ಲದ ರೀತಿಯಲ್ಲಿ ಪರೀಕ್ಷೆಗಳನ್ನು ಧೈರ್ಯವಾಗಿ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಎದುರಿಸಿದ್ದಾರೆ.

'ಈಗಾಗಲೇ ಹೇಳಿದಂತೆ ನಮಗೆ ಇಂತಹ ಸಂಕಷ್ಟದ ಸಂದರ್ಭದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ನಡೆಸುವುದು ಬಹುದೊಡ್ಡ ಸವಾಲಾಗಿತ್ತು. ಅದು ನಮ್ಮ ಪ್ರತಿಷ್ಠೆಯ ಪ್ರಶ್ನೆಯಾಗದೇ ವಿದ್ಯಾರ್ಥಿಗಳ ಹಿತ ಹಾಗೂ ಸುರಕ್ಷತೆಯೇ ಮುಖ್ಯವಾಗಿತ್ತು. ಆ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ನಾವು ಸರ್ಕಾರದ ಪ್ರಯತ್ನವಾಗಿ ಬಹು ಯಶಸ್ವಿಯಾಗಿ ನಿರ್ವಹಿಸಿದ್ದೇವೆ. ಇದು ನನಗೆ ನಿಜಕ್ಕೂ ಹೆಮ್ಮೆ ಹಾಗೂ ಅಭಿಮಾನದ ಸಂಗತಿಯಾಗಿದೆ.

'ಕರ್ನಾಟಕ ಸರ್ಕಾರ ಈ ಪರೀಕ್ಷೆಗಳನ್ನು ನಡೆಸುವ ಮೂಲಕ ಒಂದು ಇತಿಹಾಸವನ್ನು ಸೃಷ್ಟಿಸಿದೆ. ನ್ಯಾಯಾಲಯಗಳಲ್ಲಿ ಪರೀಕ್ಷೆಗಳನ್ನು ರದ್ದುಪಡಿಸಬೇಕೆಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾದವು. ಆಗಲೇ ನಾನು ರಾಜ್ಯಾದ್ಯಂತ ಕೋವಿಡ್ ಸಮಯವೆಂದೂ ಲೆಕ್ಕಿಸದೇ ಸಂಚರಿಸಲು ಶುರು ಮಾಡಿದೆ. ನಾನು ಭೇಟಿ ಮಾಡಿದ ಅಸಂಖ್ಯ ವಿದ್ಯಾರ್ಥಿಗಳು ಮತ್ತು ಪೋಷಕರು ತಮ್ಮ ಮಕ್ಕಳ ಭವಿಷ್ಯಕ್ಕೆ ಪರೀಕ್ಷೆ ಬೇಕು ಎಂದು ನನ್ನನ್ನು ಆಗ್ರಹಿಸಿದರು. ನಮ್ಮ ಜಿಲ್ಲೆಗಳ ಅಧಿಕಾರಿಗಳು ಎಂತಹ ಸಂದರ್ಭದಲ್ಲಿಯೂ ತಾವು ದೃತಿಗೆಡದೇ ಈ ಪರೀಕ್ಷೆಗಳನ್ನು ನಡೆಸುತ್ತೇವೆ ಎಂದು ಆತ್ಮವಿಶ್ವಾಸವನ್ನು ತೋರಿದರು. ಪುನಃ ನಾನು ಬೆಂಗಳೂರಿಗೆ ವಾಪಾಸು ಬಂದು ಉಚ್ಛ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾ ಮಾಡುವ ನಿಟ್ಟಿನಲ್ಲಿ ಭರವಸೆಯ ಉತ್ತರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲು ನಮ್ಮ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿದೆ.

'ಆರೋಗ್ಯ ಇಲಾಖೆ ಕಟ್ಟುನಿಟ್ಟಾದ ಮಾರ್ಗದರ್ಶಿ ಸೂತ್ರಗಳನ್ನು ನಮಗಾಗಿ ರಚಿಸಿಕೊಟ್ಟಿತು. ಆ ಮಾರ್ಗದರ್ಶಿ ಸೂತ್ರಗಳ ಮೇಲೆ ನ್ಯಾಯಾಲಯವು ಭರವಸೆಯನ್ನಿಟ್ಟು, ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಿರಸ್ಕರಿಸಿ ಪರೀಕ್ಷೆಗಳನ್ನು ನಡೆಸಲು ಅವಕಾಶ ಕೊಟ್ಟಿತು. ಅದೇ ರೀತಿ ಮುಂದಿನ ದಿನಗಳಲ್ಲಿ ಸುಪ್ರೀಂ ಕೋರ್ಟ್‌ನಲ್ಲೂ ಸಹ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಯಿತು. ಅಲ್ಲಿಯೂ ಸಹ ಸೂಕ್ತ ಆಕ್ಷೇಪಣಾ ಹೇಳಿಕೆಗಳನ್ನು ಸಲ್ಲಿಸಿದ ಬಳಿಕ ಸುಪ್ರೀಂ ಕೋರ್ಟ್ ಪರೀಕ್ಷೆಗಳನ್ನು ನಡೆಸಲು ತನ್ನ ಹಸಿರು ನಿಶಾನೆ ತೋರಿಸಿತು.

'ನಂತರ ನಮ್ಮಲ್ಲಿ ಘಟಿಸಿದ್ದು ಇತಿಹಾಸ. ಪ್ರತಿ ವಿದ್ಯಾರ್ಥಿಗೆ ಪರೀಕ್ಷೆ ಬರೆಯುವ ಸುರಕ್ಷಿತ ವಾತಾವರಣವನ್ನು ನಾವು ಕಲ್ಪಿಸಬೇಕಾಗಿತ್ತು. ಪ್ರತಿ ಪೋಷಕರಿಗೆ ತಮ್ಮ ಮಗು ತಮ್ಮ ಮನೆಯಲ್ಲಿನ ಸುರಕ್ಷಿತ ವಾತಾವರಣದಷ್ಟೇ ಪರೀಕ್ಷಾ ಕೊಠಡಿ ಸುರಕ್ಷಿತವಾಗಿರುತ್ತದೆ ಎಂಬ ಭರವಸೆ ನೀಡಬೇಕಾಗಿತ್ತು. ನಮ್ಮ ಅಧಿಕಾರಿಗಳು ಪ್ರತಿ ಸೂಕ್ಷ್ಮ ಅಂಶಗಳನ್ನೂ ಗಮನದಲ್ಲಿಟ್ಟುಕೊಂಡು ಆರೋಗ್ಯ ಇಲಾಖೆಯ ಮಾರ್ಗದರ್ಶಿ ಸೂತ್ರಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಯಾವುದೇ ಒಬ್ಬ ವಿದ್ಯಾರ್ಥಿಗೆ ತೊಂದರೆಯಾಗದ ರೀತಿಯಲ್ಲಿ ಪರೀಕ್ಷೆಗಳನ್ನು ನಡೆಸಬೇಕಿತ್ತು. ನನ್ನ ಭರವಸೆಯನ್ನು ಅವರಾರು ಹುಸಿಗೊಳಿಸಲಿಲ್ಲ.

'ಪ್ರತಿ ಪರೀಕ್ಷೆಗೆ ಸರಾಸರಿ ಶೇ 98 ವಿದ್ಯಾರ್ಥಿಗಳು ಹಾಜರಾಗಿ ವ್ಯವಸ್ಥೆಯ ಮೇಲಿನ ಭರವಸೆಯನ್ನು ತೋರಿದ್ದಾರೆ. ನೆರೆ ರಾಜ್ಯಗಳಾದ ತಮಿಳುನಾಡು, ತೆಲಂಗಾಣ, ಆಂದ್ರಪ್ರದೇಶ, ಪುದುಚೆರಿ, ಮಹಾರಾಷ್ಟ್ರಗಳು ಸೇರಿದಂತೆ ಬಹುಪಾಲು ರಾಜ್ಯ ಸರ್ಕಾರಗಳು ತಮ್ಮ ಮಂಡಳಿಗಳ ಪರೀಕ್ಷೆಗಳನ್ನು ಮಾಡದೇ ಹಿಂದೆ ಸರಿದವು. ನಾಡಿನ ಮಕ್ಕಳ ಹಿತ ಮತ್ತು ಅವರ ಭವಿಷ್ಯವನ್ನು ಗಮನದಲ್ಲಿಟುಕೊಂಡು ಅವರ ಇಚ್ಛೆಯಂತೆ ನಾವು ಪರೀಕ್ಷೆಗಳನ್ನು ನಡೆಸಿದ್ದೇವೆ.

'ಕೋವಿಡ್ ಕಾರಣಕ್ಕೆ ನಾವು ದೂರದರ್ಶನದ ಚಂದನ ವಾಹಿನಿಯಲ್ಲಿ ನಡೆಸಿದ ಪುನರ್ಮನನ ಕಾರ್ಯಕ್ರಮಗಳು ಆ ವಾಹಿನಿಯ ಸಾರ್ವಕಾಲಿಕ ಜನಪ್ರಿಯ ಕಾರ್ಯಕ್ರಮಗಳಲ್ಲಿ ಒಂದಾದವು. ಲಕ್ಷಾಂತರ ವಿದ್ಯಾರ್ಥಿಗಳು ಆ ಪ್ರಯತ್ನದ ಫಲವನ್ನು ಪಡೆದವು. ಅದೇ ರೀತಿ ಆಕಾಶವಾಣಿಯಲ್ಲಿ ಪರೀಕ್ಷಾ ಪೂರ್ವ ಸಿದ್ಧತಾ ತರಗತಿಗಳು ಬಿತ್ತರಗೊಂಡವು. ನಮ್ಮ ಮಕ್ಕಳವಾಣಿ ಯು-ಟ್ಯೂಬ್ ಚಾನೆಲ್‍ನಲ್ಲೂ ಸಹ ಪುನರ್ಮನನ ತರಗತಿಗಳು ಬಿತ್ತರಗೊಂಡು ಜನಪ್ರಿಯವಾದವು.

'ಆರೋಗ್ಯ ಇಲಾಖೆ ನಿಗದಿಪಡಿಸಿದ ಮಾರ್ಗದರ್ಶಿ ಸೂತ್ರಗಳನ್ನು ಯಾವುದೇ ಒಂದು ಸಣ್ಣ ಲೋಪವಾಗದಂತೆ ಅಳವಡಿಸಿಕೊಂಡು ನಾವು ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದೆವು. ಕೋವಿಡ್ ಸೋಂಕಿತ 33 ವಿದ್ಯಾರ್ಥಿಗಳಿಗೆ ಪೂರ್ವಭಾವಿಯಾಗಿ ಪರೀಕ್ಷೆಯನ್ನು ನಿರಾಕರಿಸಿ ಅವರಿಗೆ ಮುಂದಿನ ಪೂರಕ ಪರೀಕ್ಷೆಗಳಲ್ಲಿ ಅವಕಾಶಗಳನ್ನು ಕಲ್ಪಿಸುವವರಿದ್ದೇವೆ.

ಕೃತಜ್ಞತೆ:ಬಹು ವಿಶೇಷವೆಂದರೆ ಸುಮಾರು 7.5 ಲಕ್ಷ ವಿದ್ಯಾರ್ಥಿಗಳು ಪ್ರತಿದಿನ ಪರೀಕ್ಷೆಗಳನ್ನು ಬರೆದಿದ್ದಾರೆ. ಪರೀಕ್ಷೆಯ ಯಶಸ್ಸಿಗೆ ಸಹಕರಿಸಿ ಸಲಹೆ ಸೂಚನೆ ನೀಡಿ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವ ಸಂಪುಟದ ಸಹೋದ್ಯೋಗಿಗಳು, ರಾಜ್ಯದ ವಿಧಾನಸಭೆ, ವಿಧಾನಪರಿಷತ್‍ನ ಎಲ್ಲ ಸದಸ್ಯರು, ವಿರೋಧ ಪಕ್ಷಕದ ನಾಯಕರು, ರಾಜ್ಯದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಜಿಲ್ಲೆಗಳ ಡಿಸಿ, ಎಸ್ಪಿ, ಸಿಇಒ, ಡಿಎಚ್‍ಒ, ಖಜಾನಾಧಿಕಾರಿಗಳು ಹಾಗೆಯೇ ಆಯಾ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸೇರಿದಂತೆ ಪ್ರತ್ಯಕ್ಷ ಹಾಗೂ ಪರೀಕ್ಷವಾಗಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳು.

ಎಸ್‍ಒಪಿ ಕಟ್ಟುನಿಟ್ಟಿನ ಪಾಲನೆ:ಎಸ್‍ಒಪಿ ಪ್ರಕಾರ ಕೋವಿಡ್ ಸೋಂಕು ಇರುವ ಮನೆಗಳ ಮಕ್ಕಳಿಗೆ ಪರೀಕ್ಷೆಗೆ ಅವಕಾಶವಿರಲಿಲ್ಲ. ಅದರಂತೆ ಕೊನೆಯ ದಿನವಾದ ಇಂದು ರಾಜ್ಯದ ಹಿರಿಯ ಅಧಿಕಾರಿಯೊಬ್ಬರ ಮನೆಯಲ್ಲಿ ಒಬ್ಬರಿಗೆ ಸೋಂಕು ತಗಲಿದ್ದರಿಂದ ಇಂದು ಅವರ ಮನೆಯ ವಿದ್ಯಾರ್ಥಿಗೆ ಪರೀಕ್ಷೆ ನಿರಾಕರಿಸಲಾಯಿತು. ಈ ವಿಚಾರದಲ್ಲಿ ಕಳೆದ ಆರು ದಿನಗಳಲ್ಲಿಯೂ ಯಾವುದೇ ರೀತಿಯ ವ್ಯತ್ಯಯವಾಗದಂತೆ ನ್ಯಾಯಾಲಯಕ್ಕೆ ನೀಡಿದ ವಾಗ್ದಾನದಂತೆ ಕಟ್ಟುನಿಟ್ಟಾಗಿ ನಡೆದುಕೊಳ್ಳಲಾಗಿದೆ.

ಎಲ್ಲರೂ ಒಟ್ಟಾಗಿ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಎಂತಹ ಸಂಕಷ್ಟದ ಸಂದರ್ಭವನ್ನೂ ಸುಲಭವಾಗಿ ದಾಟಬಹುದು ಮತ್ತು ಏನನ್ನಾದರೂ ಸಾಧಿಸಬಹುದೆನ್ನುವುದಕ್ಕೆ ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮಾದರಿಯಾಗಿ ನಿಂತಿದೆ.

ಡಾಕ್ಯೂಮೆಂಟರಿ ಪ್ರದರ್ಶನ

ಪತ್ರಿಕಾಗೋಷ್ಠಿಗೂ ಮೊದಲು ಪರೀಕ್ಷೆಯ ಕುರಿತಂತೆ ತಯಾರಿಸಲಾದ ವಿವಿಧ ಘಟನಾವಳಿಗಳ ಡಾಕ್ಯೂಮೆಂಟರಿಯನ್ನು ಪ್ರಸ್ತುತಪಡಿಸಲಾಯಿತು. ಈ ಪರೀಕ್ಷೆಗೆ ಶಿಕ್ಷಣ ಇಲಾಖೆ ಕೈಗೊಂಡ ಕ್ರಮಗಳ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶ್ಲಾಘನೆ ವ್ಯಕ್ತಪಡಿಸಿದರು. ಹಲವಾರು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಕೈಗೊಂಡ ಕ್ರಮಗಳು ಹಾಗೂ ತಾವು ಖುಷಿಯಿಂದ ಪರೀಕ್ಷೆಯಲ್ಲಿ ಪಾಲ್ಗೊಂಡ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಕೆಲ ಪ್ರಮುಖ ಸಂಗತಿಗಳು

* ಗದಗದಲ್ಲಿ ಮಕ್ಕಳನ್ನು ಮನೆಗಳಿಂದ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಕರೆತರುತ್ತಿದ್ದ ಆಟೊ ಚಾಲಕರನ್ನು ಜಿಲ್ಲಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.

*ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮಾರ್ಗ ಮಧ್ಯೆ ಮರ ಬಿದ್ದು, ಸಂಚಾರಕ್ಕೆ ವ್ಯತ್ಯಯವಾಗಿತ್ತು. ಸುದ್ದಿ ತಿಳಿದ ಸಾಗರ ಬಿಇಒ ಮಕ್ಕಳನ್ನು ಕರೆತರಲು ತಕ್ಷಣವೇ ಸಾರಿಗೆ ವ್ಯವಸ್ಥೆ ಮಾಡಿದರು. ಹಾಗೆಯೇ ಆ ಮಾರ್ಗದ ಪರೀಕ್ಷಾ ಕೇಂದ್ರಗಳಿಗೆ ತಮ್ಮದೇ ವಾಹನದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಕಾಲದಲ್ಲಿ ತಲುಪಿಸಿದರು.

ಒಟ್ಟಾರೆಯಾಗಿ ಇಂದು 2879 ಪರೀಕ್ಷಾ ಕೇಂದ್ರಗಳು ಮತ್ತು 330 ಬ್ಲಾಕ್ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲ ಪರೀಕ್ಷೆಗಳು ಯಶಸ್ವಿಯಾಗಿ ನಡೆದಿದೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿಗಳು, ಸಿಬ್ಬಂದಿ, ಪೊಲೀಸ್, ಸ್ವಯಂ ಸೇವಕರು ಅತ್ಯಂತ ಸಮರ್ಪಣಾ ಮನೋಭಾವದಿಂದ ತೊಡಗಿಸಿಕೊಂಡು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ವಿದ್ಯಾರ್ಥಿಗಳು ಮತ್ತು ಪೋಷಕರು ವ್ಯವಸ್ಥೆ ಮೇಲೆ ಇಟ್ಟ ವಿಶ್ವಾಸಕ್ಕೆ ನಾನು ಆಭಾರಿಯಾಗಿದ್ದೇನೆ ಎಂದ ಸಚಿವರು ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT