ಬೆಂಗಳೂರು:‘ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಒಂದೆಡೆ ಬೆಂಗಳೂರಿನಲ್ಲಿ ಭೂ ಮಾಫಿಯಾಕ್ಕೆ ಬೆಂಬಲ ನೀಡುತ್ತಿದ್ದಾರೆ.ಇನ್ನೊಂದೆಡೆ ಸಾಮಾಜಿಕ ನ್ಯಾಯಕ್ಕಾಗಿ ದುಡಿದ ದೇವರಾಜ ಅರಸು ಅವರೊಂದಿಗೆ ತಮ್ಮನ್ನು ಹೋಲಿಸಿಕೊಳ್ಳುತ್ತಿದ್ದಾರೆ’ ಎಂದು ಬಿಜೆಪಿ ಶಾಸಕ ಗೋವಿಂದ ಕಾರಜೋಳ ಟೀಕಿಸಿದರು.
ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 'ಅರಸು ಅವರನ್ನು ಯಾರೂ ತಮಗೆ ಹೋಲಿಸಿಕೊಳ್ಳಬಾರದು ಎಂದು ವಿಧಾನಸಭೆಯಲ್ಲಿಯೇ ಹೇಳಿದ್ದೇನೆ. ಆದರೂ ಸಿದ್ದರಾಮಯ್ಯ ತಮಗೆ ಹೋಲಿಸಿಕೊಳ್ಳುತ್ತಿದ್ದಾರೆ. ಅವರಿಗೆ ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ಆಸೆಯಿದೆ. ಆದ್ದರಿಂದ ತಮ್ಮ ಶಿಷ್ಯರ ಮೂಲಕ ಹೇಳಿಕೆಗಳನ್ನು ಕೊಡಿಸುತ್ತಿದ್ದಾರೆ' ಎಂದರು.
ಡಿ.ಕೆ. ಶಿವಕುಮಾರ್, ಆರ್.ವಿ. ದೇಶಪಾಂಡೆ, ಎಂ.ಬಿ. ಪಾಟೀಲ, ಸಿದ್ರಾಮಯ್ಯ, ಪರಮೇಶ್ವರ, ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ. ರೇವಣ್ಣ ಇವರೆಲ್ಲರಿಗೂ ಮುಖ್ಯಮಂತ್ರಿ ಆಗುವ ಆಸೆಯಿದೆ. ಈ ಅಸೆಯ ಕಚ್ಚಾಟದಿಂದಲೇ ಕಾಂಗ್ರೆಸ್ ಮೂರು ಹೋಳಾಗುತ್ತದೆ ಎಂದರು.
ರಾಜ್ಯದ ಜನ ಬರಗಾಲದಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಮುಖ್ಯಮಂತ್ರಿ ರಾಜಕಾರಣದಲ್ಲಿ ಕಾಲಹರಣ ಮಾಡುವುದು ಬಿಟ್ಟು ಜನರ ಸಮಸ್ಯೆಗಳಿಗೆ ಸ್ಪಂದಿಸಲಿ ಎಂದರು. ಕುಂದಗೋಳ ಹಾಗೂ ಚಿಂಚೊಳಿಯಲ್ಲಿ ಬಿಜೆಪಿಯೇ ಗೆಲ್ಲುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.
ರೇಣುಕಾಚಾರ್ಯ ಮಾತನಾಡಿ ಮುಖ್ಯಮಂತ್ರಿಯಾಗುವ ಆಸೆಯಿಂದ ಡಿ.ಕೆ. ಶಿವಕುಮಾರ್ ಹಾಗೂ ಎಂ.ಬಿ. ಪಾಟೀಲ ಉಪಚುನಾವಣೆಯ ಸಾರಥ್ಯ ವಹಿಸಿಕೊಂಡಿದ್ದಾರೆ. ಇಬರಿಬ್ಬರೂ ತಲಾ ₹ 50 ಕೋಟಿ ಚುನಾವಣೆಗೆ ಖರ್ಚು ಮಾಡಿದ್ದಾರೆ ಎಂದು ಆರೋಪಿಸಿದರು.