ಮಂಡ್ಯ: ‘ಬಿ.ಎಸ್.ಯಡಿಯೂರಪ್ಪ ಒಬ್ಬ ಹೋರಾಟಗಾರ. 105 ಸೀಟು ಗೆದ್ದರೂ ಮುಖ್ಯಮಂತ್ರಿಯಾಗಲು ಸಾಧ್ಯವಾಗದ ಅವರಿಗೆ, ಅತೃಪ್ತ ಶಾಸಕರ ರಾಜೀನಾಮೆಯಿಂದಾಗಿ ಆ ಅವಕಾಶ ಸಿಕ್ಕಿದೆ’ ಎಂದು ಕಾಂಗ್ರೆಸ್ ಮುಖಂಡ ಎನ್.ಚಲುವರಾಯಸ್ವಾಮಿ ಶನಿವಾರ ಇಲ್ಲಿ ಹೇಳಿದರು.
‘ನಮ್ಮ ಜಿಲ್ಲೆಯ ಮಗ ಮುಖ್ಯಮಂತ್ರಿಯಾಗಿದ್ದಾರೆ. ಅವರಿಗೆ ಮತ್ತೊಮ್ಮೆ ಈ ಅವಕಾಶ ಸಿಗುವುದು ಕಡಿಮೆ. ಹೀಗಾಗಿ ರಾಜ್ಯದ ಸಮಸ್ಯೆಗಳನ್ನು ಬಗೆಹರಿಸಿ ಉತ್ತಮ ಆಡಳಿತ ನೀಡುತ್ತಾರೆ ಎಂಬ ನಂಬಿಕೆ ಇದೆ’ ಎಂದರು.
ಉಪಚುನಾವಣೆ ಸ್ಪರ್ಧೆ ಇಲ್ಲ: ‘ನಾನು ಸಾರ್ವತ್ರಿಕ ಚುನಾವಣೆಯಲ್ಲಿ ಮಾತ್ರ ಸ್ಪರ್ಧಿಸುತ್ತೇನೆ; ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. 17 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷ ಉಸ್ತುವಾರಿಗಳನ್ನು ನೇಮಕ ಮಾಡಿದೆ. ನನಗೂ ಉಸ್ತುವಾರಿ ವಹಿಸಲಾಗಿದೆ. ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಸ್ಥಳೀಯ ಮುಖಂಡರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿ ಘೋಷಣೆ ಮಾಡಲಾಗುವುದು’ ಎಂದರು.