ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಲಿರುವ 108 ಅಡಿ ಎತ್ತರದ ಕಂಚಿನ ಪ್ರತಿಮೆ ಹಾಗೂ 23 ಎಕರೆ ಪ್ರದೇಶದಲ್ಲಿ ರೂಪುಗೊಳ್ಳಲಿರುವ ಸೆಂಟ್ರಲ್ ಪಾರ್ಕ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೆಂಪೇಗೌಡ ಜಯಂತಿಯ ದಿನವಾದ ಶನಿವಾರ ಭೂಮಿಪೂಜೆ ನೆರವೇರಿಸಿದರು.
ಬಿ.ಎಸ್.ಯಡಿಯೂರಪ್ಪ, 'ಕೆಂಪೇಗೌಡರ ಜೀವನ ಸಾಧನೆ ಉದ್ಯಾನದಲ್ಲಿ ಅನಾವರಣಗೊಳ್ಳಲಿದೆ. ಅದರ ಕೇಂದ್ರಭಾಗದಲ್ಲಿ ಅವರ ಪ್ರತಿಮೆ ವರ್ಷದೊಳಗೆ ಪ್ರತಿಷ್ಠಾಪನೆಗೊಳ್ಳಲಿದೆ' ಎಂದು ತಿಳಿಸಿದರು.
'ಪಕ್ಷಭೇದವಿಲ್ಲದೆ ಎಲ್ಲರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಏಕತೆಯಿಂದ ಕಾರ್ಯಕ್ರಮ ಆರಂಭ ಗೊಂಡಿದ್ದು, ಪ್ರತಿಮೆ ಕೆಲಸ ಶೀಘ್ರವಾಗಿ ನಡೆಯಲಿ. ಕಾಮಗಾರಿಗಳು ವೇಗವಾಗಿ ಪೂರ್ಣಗೊಳ್ಳುವಂತೆ ಸರ್ಕಾರ ನೋಡಿಕೊಳ್ಳಬೇಕು' ಎಂದು ಎಚ್.ಡಿ.ದೇವೇಗೌಡ ಹೇಳಿದರು.
ಡಿ.ಕೆ.ಶಿವಕುಮಾರ್, ‘ಇಡೀ ವಿಶ್ವ ಬೆಂಗಳೂರಿನಿಂದ ಭಾರತವನ್ನು ಗುರುತಿಸುತ್ತಿದೆ. ಅಂತರರಾಷ್ಟ್ರೀಯ ಜನತೆಗೆ ಕೆಂಪೇಗೌಡರನ್ನು ಪರಿಚಯಿ ಸುತ್ತಿರುವ ಸರ್ಕಾರಕ್ಕೆ ಅಭಿನಂದನೆಗಳು’ ಎಂದರು.
‘ನದಿಯಿಲ್ಲದ ಜಾಗದಲ್ಲಿ ನಗರ ಸ್ಥಾಪನೆ ಮಾಡುವುದು ಸವಾಲಿನ ಕೆಲಸ. ಆದರೆ, ಕೆಂಪೇಗೌಡರು ಜಲ ಮತ್ತು ಪ್ರಕೃತಿಸ್ನೇಹಿ ನಗರವನ್ನು ನಿರ್ಮಿಸಿದರು. ಎಲ್ಲ ಜನಾಂಗದವರಿಗೆ ಪೇಟೆಗಳನ್ನು ಕಟ್ಟಿದರು. ಈ ಮಹಾಪುರುಷರ ಕಾರ್ಯಗಳು ಸಮಾಜಕ್ಕೆ ಸ್ಫೂರ್ತಿ. ಕೆಂಪೇಗೌಡರ 511ನೇ ಜಯಂತಿಯ ಹಿನ್ನೆಲೆಯಲ್ಲಿ ಪಕ್ಷಾತೀತ ಹಾಗೂ ಜಾತ್ಯತೀತವಾಗಿ ಈ ಕಾರ್ಯಕ್ಕೆ ಮುಂದಾಗಿದ್ದೇವೆ’ ಎಂದು ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.
ಚಂದ್ರಶೇಖರ ಸ್ವಾಮೀಜಿ, ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ, ಮೇಯರ್ ಗೌತಮ್ ಕುಮಾರ್, ಸಂಸದ ತೇಜಸ್ವಿ ಸೂರ್ಯ, ರೈಲ್ವೆ ಖಾತೆರಾಜ್ಯ ಸಚಿವ ಸುರೇಶ್ ಅಂಗಡಿ, ಸಚಿವರಾದ ಗೋಪಾಲಯ್ಯ, ಶಾಸಕರಾದ ಎಲ್.ಎನ್.ನಿಸರ್ಗ ನಾರಾಯಣಸ್ವಾಮಿ, ಎಸ್.ಆರ್.ವಿಶ್ವನಾಥ್ ಹಾಗೂ ಇತರರು ಭಾಗವಹಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.