ದಾವಣಗೆರೆ: ವಿಷ ಪ್ರಸಾದ ಸೇವನೆ ಪ್ರಕರಣದಿಂದ ಸುದ್ದಿಯಾದ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಸುಳ್ವಾಡಿ ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ಪಡೆಯುವ ಪ್ರಕ್ರಿಯೆಗಳು ನಡೆದಿವೆ ಎಂದು ರಾಜ್ಯ ಮುಜರಾಯಿ ಖಾತೆ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಹೇಳಿದರು.
ನಗರದಲ್ಲಿ ಬುಧವಾರ ಸೇವಾಲಾಲ್ ಜಯಂತಿ ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಈ ಕುರಿತಂತೆ ಜಿಲ್ಲಾಧಿಕಾರಿ ವರದಿ ನೀಡಿದ್ದು, ಸ್ಥಳೀಯ ಶಾಸಕರೂ ಒಪ್ಪಿಗೆ ಸೂಚಿಸಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರ ಮುಂದಿಟ್ಟು, ಒಪ್ಪಿಗೆ ಪಡೆದು ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ಸೇರಿಸಲಾಗುವುದು ಎಂದು ಹೇಳಿದರು.
‘ಈಗಾಗಲೇ ನಾನು ದೇವಸ್ಥಾನಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದೇನೆ. ವಿಷ ಪ್ರಸಾದ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸರ್ಕಾರ ಭದ್ರ:ಸರ್ಕಾರ ಭದ್ರವಾಗಿದೆ. ಕಾಂಗ್ರೆಸ್ನ ಯಾವುದೇ ಶಾಸಕರು ರಾಜೀನಾಮೆ ನೀಡುವುದಿಲ್ಲ. ಬಿಜೆಪಿಯ ಹಸಿ ಸುಳ್ಳಿಗೆ ಯಾರೂ ತಲೆಕೆಡಿಸಿಕೊಳ್ಳಬೇಕಾಗಿಲ್ಲ ಎಂದು ಸಚಿವ ಪರಮೇಶ್ವರ ನಾಯ್ಕ ಹೇಳಿದರು.
ಸಮರ್ಥ ವಿರೋಧ ಪಕ್ಷವಾಗಿ ಕೆಲಸ ಮಾಡಬೇಕಾಗಿದ್ದ ಬಿಜೆಪಿ ಅದನ್ನು ಮರೆತು ಕಳೆದ ಆರು ತಿಂಗಳಿಂದ ಸರ್ಕಾರ ಬೀಳಿಸುವ ಹುನ್ನಾರ ಮಾಡುತ್ತಲೇ ಇದೆ. ಆದರೆ, ಇದು ಕನಸು ಎಂದು ಟೀಕಿಸಿದರು.