ಬೆಂಗಳೂರು: ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸುಮಲತಾ ಅಂಬರೀಷ್ ಅವರ ಕ್ಷಮೆಯಾಚಿಸಿದ್ದಾರೆ.
‘ಗಂಡ ಸತ್ತು ಇನ್ನೂ ಒಂದೆರಡು ತಿಂಗಳಾಗಿಲ್ಲ. ಸುಮಲತಾ ಅವರಿಗೆ ರಾಜಕೀಯ ಯಾಕೆ ಬೇಕಿತ್ತು’ ಎಂದು ರೇವಣ್ಣ ಹೇಳಿಕೆ ನೀಡಿದ್ದರು. ಇದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.
ಮುಖ್ಯಮಂತ್ರಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಭಾನುವಾರ ಚಾಲನೆ ನೀಡಿದ ಬಳಿಕ ಮಾತನಾಡಿದ ಕುಮಾರಸ್ವಾಮಿ, ‘ರೇವಣ್ಣ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ನಾನೇ ಕ್ಷಮೆ ಕೇಳುತ್ತೇನೆ. ನಮ್ಮ ಕುಟುಂಬ ಮಹಿಳೆಯರಿಗೂ ಗೌರವ ನೀಡುವ ಕುಟುಂಬ’ ಎಂದರು.