ಶ್ರೀರಂಗಪಟ್ಟಣ: ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಪರ ಕೆಲಸ ಮಾಡುವುದಾಗಿ ಸ್ಥಳೀಯ ಕೆಲ ಕಾಂಗ್ರೆಸ್ ಮುಖಂಡರು ಘೋಷಿಸಿದ್ದಾರೆ.
ಈ ಸಂಬಂಧ ಭಾನುವಾರ ಪತ್ರಿಕಾಗೋಷ್ಠಿ ನಡೆಸಿ ಜೆಡಿಎಸ್ಗೆ ಬೆಂಬಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
‘ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸಹ ಪರೋಕ್ಷವಾಗಿ ಬೆಂಬಲ ನೀಡಿದ್ದಾರೆ. ಹೀಗಾಗಿ, ಸ್ಥಳೀಯ ಕಾಂಗ್ರೆಸ್ ಪದಾಧಿಕಾರಿಗಳು ಸುಮಲತಾ ಪರವಾಗಿ ಕೆಲಸ ಮಾಡಲಿದ್ದಾರೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಬೆಳಗೊಳ ಮಂಜುನಾಥ್ ಹೇಳಿದರು.
‘ಪಕ್ಷಕ್ಕೆ ಅಂಬರೀಷ್ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಕಾಂಗ್ರೆಸ್ ಪಕ್ಷವನ್ನು ಉಳಿಸಲು ಸುಮಲತಾ ಅವರನ್ನು ಬೆಂಬಲಿಸಲಿದ್ದೇವೆ. ನಮ್ಮ ವಿರುದ್ಧ ಯಾವುದೇ ಕ್ರಮ ಕೈಗೊಂಡರೂ ಬಗ್ಗುವುದಿಲ್ಲ’ ಎಂದರು.
ತಾಲ್ಲೂಕು ಪಂಚಾಯಿತಿ ಸದಸ್ಯ ದೇವರಾಜು, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಸ್. ರಘು ಇದಕ್ಕೆ ಧ್ವನಿ ಗೂಡಿಸಿದರು.