ಬೆಳಗಾವಿ:ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ವಿಷಯದಲ್ಲಿ ಕೇಂದ್ರ ಸರ್ಕಾರವು ರಾಜ್ಯವನ್ನು ನಿರ್ಲಕ್ಷ್ಯ ಮಾಡಿಲ್ಲ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಸಮರ್ಥಿಸಿಕೊಂಡರು.
ಇಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನೆರೆ ಸಂತ್ರಸ್ತರಿಗೆ ಪರಿಹಾರ ಹಾಗೂ ಪುನರ್ವಸತಿ ಕಾರ್ಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಿ ಕೆಲಸ ಮಾಡುತ್ತಿವೆ. ಹಣಕಾಸಿನ ತೊಂದರೆ ಇಲ್ಲ ಎಂದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಪರಿಹಾರ ಕಾರ್ಯಗಳು ಉತ್ತಮ ರೀತಿಯಲ್ಲಿ ನಡೆದಿವೆ ಎಂದು ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪರಿಹಾರ ಕಾರ್ಯದಲ್ಲಿ ಯಾವುದೇ ಸಮಸ್ಯೆ ಹಾಗೂ ಹಣಕಾಸಿನ ಸಮಸ್ಯೆ ಇಲ್ಲ. ಜಿಲ್ಲಾಧಿಕಾರಿಗಳ ಬಳಿ ಹಣ ಇದೆ ಎಂದು ತಿಳಿಸಿದರು.
ಕರ್ನಾಟಕದಲ್ಲಿ ನೆರೆ ಬಂದಾಗ ಪ್ರಧಾನಿ ಬೇರೆ ದೇಶಗಳ ಪ್ರವಾಸದಲ್ಲಿದ್ದರು. ಹೀಗಾಗಿ ಇಲ್ಲಿನ ಸಂತ್ರಸ್ತರ ಬಗ್ಗೆ ಟ್ವೀಟ್ ಮಾಡಿಲ್ಲ. ಎಷ್ಟೇ ಹಣ ಬೇಕಾದರೂ ಕೊಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದರು.