ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಶಿಕ್ಷಕರಿಗೆ ನೆರವು: ಸರ್ಕಾರಿ ಶಿಕ್ಷಕರಿಗೆ ಸುರೇಶ್ ಕುಮಾರ್ ಮನವಿ

Last Updated 6 ಜುಲೈ 2020, 12:20 IST
ಅಕ್ಷರ ಗಾತ್ರ

ಬೆಂಗಳೂರು:ಕಾಲಘಟ್ಟದಲ್ಲಿನ ಸಂಕಷ್ಟದ ಹಿನ್ನೆಲೆಯಲ್ಲಿ ಆರ್ಥಿಕವಾಗಿ ತೀವ್ರ ದುಃಸ್ಥಿತಿಯಲ್ಲಿರವ ಸಾರ್ವಜನಿಕ ಶಿಕ್ಷಣ ಇಲಾಖೆಯ ಖಾಸಗಿ ಅನುದಾನ ರಹಿತ ಶಾಲೆಗಳ ಶಿಕ್ಷಕರ ನೆರವಿಗೆ ಇಲಾಖೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರು ಧಾವಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಶ್ರೀ ಎಸ್. ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.

ಸೋಮವಾರ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಸಚಿವರು, ಖಾಸಗಿ ಶಾಲಾ ಶಿಕ್ಷಕರು ತೀವ್ರ ಸಂಕಷ್ಟದಲ್ಲಿರುವುದನ್ನು ನಮ್ಮ ಇಲಾಖೆ ಗಮನಿಸಿದೆ. ಈ ಕುರಿತು ಸಾರ್ವಜನಿಕವಾಗಿಯೂ ಹೆಚ್ಚಿನ ಕಳಕಳಿ ವ್ಯಕ್ತವಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಅವರ ನೆರವಿಗೆ ನಾವು ಧಾವಿಸುವುದು ಅಗತ್ಯವೆಂಬುದನ್ನು ನಾವೆಲ್ಲರೂ ಕಂಡುಕೊಳ್ಳಬೇಕಾದ ಸಂದರ್ಭ ಇದಾಗಿದೆ ಎಂದರು.

ಇದು ನಮ್ಮೆಲ್ಲರ ಸಾಮಾಜಿಕ ಜವಾಬ್ದಾರಿಯೂ ಸಹ ಆಗಿದೆ. ಹಾಗಾಗಿ ನಮ್ಮ ಶಿಕ್ಷಕ ಬಂಧುಗಳು ಒಂದು ಇಲ್ಲವೇ ಎರಡು ದಿನಗಳ ವೇತನವನ್ನು ನೀಡುವ ಮೂಲಕ ನಮ್ಮ ಸಾಮಾಜಿಕ ಹೊಣೆಗಾರಿಕೆಯನ್ನು ಪ್ರದರ್ಶಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಸಂಕಷ್ಟದಲ್ಲಿರುವ ಖಾಸಗಿ ಶಾಲಾ ಶಿಕ್ಷಕರ ನೆರವಿಗೆ ಹೇಗೆ ಬರಬಹುದೆಂಬ ಕುರಿತು ಸರ್ಕಾರದ ಮಟ್ಟದಲ್ಲಿಯೂ ಚಿಂತನೆ ನಡೆದಿದೆ. ಇಲಾಖೆಯ ಲಭ್ಯ ಸಂಪನ್ಮೂಲಗಳ ಮೂಲಕವೂ ಕಷ್ಟದಲ್ಲಿರುವ ನಮ್ಮ ಶಿಕ್ಷಕರಿಗೆ ಇತಿಮಿತಿಗಳಲ್ಲಿ ಆರ್ಥಿಕ ಸಹಕಾರ ನೀಡಲು ಸರ್ಕಾರ ಸಹ ಅವಕಾಶಗಳನ್ನು ಅವಲೋಕಿಸುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ಶಿಕ್ಷಕರಿಗೆ ನೆರವಾಗಲು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀನಾರಾಯಣಸ್ವಾಮಿಯವರು ತಮ್ಮ ಒಂದು ತಿಂಗಳ ವೇತನ ನೀಡಲು ಮುಂದಾಗಿದ್ದಾರೆ. ನಾನೂ ಸಹ ನನ್ನ ಪಾಲನ್ನು ನೀಡುವೆ ಎಂದು ಹೇಳಿರುವ ಸುರೇಶ್ ಕುಮಾರ್, ನಮ್ಮ ಶಿಕ್ಷಕರು ಉದಾರತೆ ಮೆರೆಯುವ ಮೂಲಕ ಸಮಾಜಕ್ಕೆ ಇಂದು ಅವಶ್ಯವಿರುವ ಸಕಾರಾತ್ಮಕ ಸಂದೇಶ ನೀಡಬೇಕೆಂದು ಮನವಿ ಮಾಡಿದ್ದಾರೆ.

ಸರ್ಕಾರ ತನ್ನ ಕಠಿಣ ಪರಿಸ್ಥಿತಿಯಲ್ಲಿಯೂ ನಮ್ಮ ಶಿಕ್ಷಕರ ವೇತನ ಭತ್ಯೆಗಳನ್ನು ನೀಡಲು ಯಾವುದೇ ವಿಳಂಬ ಮಾಡಿಲ್ಲ. ಈ ಸಂದರ್ಭದಲ್ಲಿ ನಾವೆಲ್ಲ ಮಾನವೀಯ ಗುಣವನ್ನು ಮರೆಯಬೇಕಿದೆ. ಆ ಮೂಲಕ ನಮ್ಮ ಖಾಸಗಿ ಶಾಲಾ ಶಿಕ್ಷಕರ ನೆರವಿಗೆ ನಮ್ಮ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರು ಮುಂದೆ ಬರಬೇಕೆಂದು ಸುರೇಶ್ ಕುಮಾರ್ ಶಿಕ್ಷಕ ಸಮೂಹದಲ್ಲಿ ಮನವಿ ಮಾಡಿದ್ದಾರೆ.

ಕೊರೊನಾ ಸಂಕಷ್ಟದ ಸಮಯದಲ್ಲಿ ಹಲವಾರು ರೀತಿಯ ವೃತ್ತಿ ನಿರತರು ಸಂಕಷ್ಟದಲ್ಲಿದ್ದಾರೆ. ಆದರೆ ರಾಷ್ಟ್ರ ನಿರ್ಮಾತೃಗಳು ಹಾಗೂ ನಮ್ಮ ಮಕ್ಕಳಿಗಾಗಿ ದುಡಿಯುತ್ತಿರುವ ಶಿಕ್ಷಕರು ಸಂಕಷ್ಟದಲ್ಲಿದ್ದಾರೆ. ಅವರ ನೆರವಿಗೆ ಮುಂದೆ ಬರುವುದು ಸಮಾಜದ ಜವಾಬ್ದಾರಿಯಾಗಿದ್ದು, ಅದನ್ನು ನಮ್ಮ ಶಿಕ್ಷಕ ಸಮುದಾಯ ಪ್ರದರ್ಶಿಸುವ ಸಮಯ ಇದಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT