ಬೆಂಗಳೂರು: ಕೋವಿಡ್–19 ನಿರ್ವಹಣೆಗೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಮಾಹಿತಿ ನೀಡುವ ಸರ್ಕಾರದ ವಕ್ತಾರರ ಜವಾಬ್ದಾರಿಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ಅವರಿಗೆ ವಹಿಸಲಾಗಿದೆ.
ಹೊಸ ಜವಾಬ್ದಾರಿ ವಹಿಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚಿಸಿದ ಹಿನ್ನೆಲೆಯಲ್ಲಿ ಸುರೇಶ್ಕುಮಾರ್ ಶುಕ್ರವಾರ ಮಾಧ್ಯಮಗೋಷ್ಠಿ ನಡೆಸಿ, ಕೋವಿಡ್–19 ಗೆ ಸಂಬಂಧಿಸಿದ ಮಾಹಿತಿಗಳನ್ನು ನೀಡಿದರು ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಈವರೆಗೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಪ್ರತ್ಯೇಕವಾಗಿ ಮಾಧ್ಯಮಗಳಿಗೆ ಮಾಹಿತಿಗಳನ್ನು ನೀಡುತ್ತಿದ್ದರು. ಪ್ರತಿಯೊಬ್ಬರು ನೀಡುವ ಮಾಹಿತಿಯ ಅಂಕಿ ಅಂಶಗಳಲ್ಲಿ ವ್ಯತ್ಯಾಸ ಇರುತ್ತಿದ್ದವು. ಇದರಿಂದ ಸಾಕಷ್ಟು ಬಾರಿ ಗೊಂದಲ ಸೃಷ್ಟಿಯಾಗಿ ಸರ್ಕಾರಕ್ಕೆ ಮುಜುಗರ ಉಂಟಾಗಿತ್ತು.