ಅಥಣಿ (ಬೆಳಗಾವಿ ಜಿಲ್ಲೆ): ‘ವಿವಿಧೆಡೆ ಮದ್ಯದ ಅಂಗಡಿಗಳಲ್ಲಿ ಮಾಲೀಕರೇ ಕಳವು ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕಳ್ಳರು ಹಣ ಮುಟ್ಟುತ್ತಿಲ್ಲ, ಮದ್ಯದ ಬಾಟಲಿಗಳನ್ನಷ್ಟೆ ಕಳವು ಮಾಡುತ್ತಿದ್ದಾರೆ’ ಎಂದರು.
‘ಏ. 20ರಿಂದ ಮದ್ಯದ ಅಂಗಡಿಗಳ ಆರಂಭಕ್ಕೆ ಅನುಮತಿ ನೀಡಲು ಉದ್ದೇಶಿಸಲಾಗಿತ್ತು. ಆದರೆ, ಬೇಡ ಎಂದು ನಾನು ಹಾಗೂ ಸಚಿವ ಜಗದೀಶ ಶೆಟ್ಟರ್ ಮನವಿ ಮಾಡಿದ್ದೆವು. ಇದಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಂದಿಸಿದ್ದಾರೆ’ ಎಂದು ತಿಳಿಸಿದರು.
‘ಮೇ 10ರವರೆಗೂ ಮದ್ಯದಂಗಡಿಗಳ ಆರಂಭಕ್ಕೆ ಅವಕಾಶ ನೀಡಬಾರದು ಎಂದು ಕೋರಿದ್ದೇವೆ. ಅದಕ್ಕೆ ಮುಖ್ಯಮಂತ್ರಿ ಒಪ್ಪಿದ್ದಾರೆ. ಮೇ 3ರ ನಂತರ ಯಾವ ನಿರ್ಧಾರ ಕೈಗೊಳ್ಳುತ್ತಾರೆಯೋ ನೋಡಬೇಕಿದೆ’ ಎಂದರು.