ಬೆಳಗಾವಿ: ‘ಜಿಲ್ಲಾ ಕಾಂಗ್ರೆಸ್ ಮುಖಂಡರಲ್ಲಿ ಅಸಮಾಧಾನ ಇರಬಹುದು. ಆದರೆ ಅದು ವೈಯಕ್ತಿಕವಾದುದು. ಪಕ್ಷದ ವಿಚಾರ ಬಂದಾಗ ಎಲ್ಲರೂ ಒಂದಾಗುತ್ತೇವೆ’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
ಇಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.
‘ಚುನಾವಣೆಯಲ್ಲಿ ನಮ್ಮಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಶ್ರಮಿಸುತ್ತಿದ್ದೇವೆ. ಬೆಳಗಾವಿ ಹಾಗೂ ಚಿಕ್ಕೋಡಿ ಕ್ಷೇತ್ರಗಳ ಚುನಾವಣೆ ಸಚಿವ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ನಡೆಯುತ್ತಿದೆ’ ಎಂದರು.
‘ನಮ್ಮಲ್ಲಿ ಸ್ಟಾರ್ ಪ್ರಚಾರಕರಿಗೆ ಏನೂ ಕೊರತೆ ಇಲ್ಲ. ಇತರ ವಿಧಾನಸಭಾ ಕ್ಷೇತ್ರಗಳ ಕಥೆ ಗೊತ್ತಿಲ್ಲ. ನನ್ನ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ವಿ.ಎಸ್. ಸಾಧುನವರ ಅವರಿಗೆ ಹೆಚ್ಚಿನ ಮತಗಳು ದೊರೆಯುವ ವಿಶ್ವಾಸವಿದೆ’ ಎಂದು ಪ್ರತಿಕ್ರಿಯೆ ನೀಡಿದರು.
‘ಗೋಕಾಕ ಕ್ಷೇತ್ರದಲ್ಲಿ ಮುಖಂಡ ಲಖನ್ ಜಾರಕಿಹೊಳಿ ಆಗಿನಿಂದಲೂ ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಈ ಚುನಾವಣೆಯಲ್ಲೂ ಸಕ್ರಿಯರಾಗಿದ್ದಾರೆ. ಅಲ್ಲಿ ಪಕ್ಷಕ್ಕೆ ಹೆಚ್ಚಿನ ಮತಗಳು ದೊರೆಯಲಿವೆ ಎನ್ನುವ ವಿಶ್ವಾಸವಿದೆ’ ಎಂದರು.