ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಿಲ್ಲ ಎಂದು ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.
ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಶಾಸಕಾಂಗ ಪಕ್ಷದ ಸಭೆಯ ಬಳಿಕ ಮಾತನಾಡಿದ ಅವರು, ‘ರಾಜ್ಯಪಾಲರ ಭಾಷಣ ನೋಡಿಕೊಂಡು ಮುಂದಿನ ಹೋರಾಟ ರೂಪಿಸುತ್ತೇವೆ. ಈ ಬಗ್ಗೆ ಚರ್ಚಿಸಲು ಬುಧವಾರ ಮತ್ತೊಮ್ಮೆ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇನೆ’ ಎಂದರು.
‘ರಾಜ್ಯದಲ್ಲಿ ಸರ್ಕಾರ ಸತ್ತಂತೆ ಆಗಿದೆ. ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ಮಧ್ಯೆ ಹೊಂದಾಣಿಕೆ ಇಲ್ಲ. ಕಾಂಗ್ರೆಸ್ನ 20 ಶಾಸಕರು ಮುಖ್ಯಮಂತ್ರಿ ಮೇಲೆ ವಿಶ್ವಾಸ ಇಲ್ಲ ಎಂದಿದ್ದಾರೆ. ಸಚಿವರು ಹಾಗೂ ಶಾಸಕರ ನಡುವೆಯೂ ಹೊಂದಾಣಿಕೆ ಇಲ್ಲ’ ಎಂದು ಅವರು ಹೇಳಿದರು.
‘ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತರಾತುರಿಯಲ್ಲಿ ಅಧಿವೇಶನ ಕರೆದಿದ್ದಾರೆ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಒಂದು ದಿನವಷ್ಟೇ ನೀಡಲಾಗಿದೆ. ಬಜೆಟ್ ಮೇಲಿನ ಚರ್ಚೆಗೆ ನಾಲ್ಕು ದಿನಗಳಷ್ಟೇ ಸಿಗಲಿವೆ’ ಎಂದರು.