ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಪ್ಪು ಜಯಂತಿ: ಬಿಡದ ಪಟ್ಟು

ಪರ ವಿರೋಧ ಮೆರವಣಿಗೆಗೆ ಅವಕಾಶ ಇಲ್ಲ: ಗೃಹ ಸಚಿವ ಪರಮೇಶ್ವರ
Last Updated 5 ನವೆಂಬರ್ 2018, 19:17 IST
ಅಕ್ಷರ ಗಾತ್ರ

ಬೆಂಗಳೂರು: ಟಿಪ್ಪು ಸುಲ್ತಾನ್‌ ಜಯಂತಿ ಆಚರಣೆಗೆ ಮೈತ್ರಿ ಸರ್ಕಾರ ಸಿದ್ಧತೆ ನಡೆಸಿದ್ದರೆ, ಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸಿ ಸರಣಿ ಹೋರಾಟ ನಡೆಸಲು ಬಿಜೆಪಿ ಮುಂದಾಗಿದೆ.

ಯಾವುದೇ ಅಡೆತಡೆ ಇಲ್ಲದಂತೆ ಟಿಪ್ಪು ಜಯಂತಿ ಆಚರಿಸುವ ಸಂಬಂಧ ಗೃಹ ಸಚಿವ ಜಿ. ಪರಮೇಶ್ವರ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ನಿರ್ದೇಶನ ನೀಡಿದರು. ಅತ್ತ ಸಭೆ ನಡೆಸಿದ ಬಿಜೆಪಿ ನಾಯಕರು, ಹೋರಾಟದ ರೂಪುರೇಷೆ ರೂಪಿಸಿದರು.

ಸಭೆ ಬಳಿಕ ಮಾತನಾಡಿದ ಪರಮೇಶ್ವರ, ‘ಟಿಪ್ಪು ಜಯಂತಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಅಥವಾ ಅವಹೇಳನಕಾರಿ ಸಂದೇಶ ಹಾಕುವವರ ವಿರುದ್ಧವೂ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇನೆ’ ಎಂದರು.

‘ಟಿಪ್ಪು‌ ಜಯಂತಿ‌ ವೇಳೆ ಪರ ಅಥವಾ ವಿರೋಧವಾಗಿ ಮೆರವಣಿಗೆ ನಡೆಸಲು ಅವಕಾಶ ನೀಡುವುದಿಲ್ಲ. ಎಲ್ಲ ಜಿಲ್ಲೆಗಳಲ್ಲೂ ಸಭಾಂಗಣದಲ್ಲಿ‌ ಆಚರಣೆಗೆ ಅವಕಾಶ ನೀಡಲಾಗುತ್ತದೆ. ಜಯಂತಿ ಆಚರಣೆಯ ಸ್ಥಳ ಹೊರತುಪಡಿಸಿ ಬೇರೆಡೆ ಪೋಸ್ಟರ್, ಬ್ಯಾನರ್ ಹಾಕುವಂತಿಲ್ಲ’ ಎಂದರು.

‘ಆಚರಣೆ ಸಂದರ್ಭದಲ್ಲಿ ಗಲಭೆ ನಡೆಸಿ ಶಾಂತಿಭಂಗ ಮಾಡಲು ಪ್ರಯತ್ನಿಸಿದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಶಾಂತಿಭಂಗ ಮಾಡುವ ಹೇಳಿಕೆಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ’ ಎಂದರು.

‘ಎಲ್ಲ ಜಿಲ್ಲೆಗಳಲ್ಲೂ ಜಯಂತಿ ಆಚರಣೆ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಇದಕ್ಕೆ ಕನ್ನಡ ಮತ್ತು‌ ಸಂಸ್ಕೃತಿ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಲಾಗಿದೆ. ಐದು ರಾಜ್ಯಗಳಲ್ಲಿ ಚುನಾವಣೆ ಇರುವುದರಿಂದ ನಮ್ಮ ಕೆಎಸ್‌ಆರ್‌ಪಿ‌ ಬೆಟಾಲಿಯನ್‌‌ ಕಳುಹಿಸಿದ್ದೇವೆ. ಹೀಗಾಗಿ ಕ್ಷಿಪ್ರ ಕಾರ್ಯಾಚರಣೆ ಪಡೆಯನ್ನು ಜಯಂತಿಗೆ ನಿಯೋಜನೆ ಮಾಡಲಾಗಿದೆ’ ಎಂದರು.

****

9ರಂದು ಬಿಜೆಪಿ ಪ್ರತಿಭಟನೆ

ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಇದೇ 9ರಂದು ರಾಜ್ಯದಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿದೆ.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌. ರವಿಕುಮಾರ್, ರಾಜ್ಯ ಸರ್ಕಾರ ಮತ ರಾಜಕಾರಣ ಮಾಡುತ್ತಿದೆ ಎಂದು ದೂರಿದರು. ‘ಟಿಪ್ಪು ಒಬ್ಬ ಮತಾಂಧ. ಆತನ ಜಯಂತಿ ಆಚರಣೆಯನ್ನು ಸರ್ಕಾರ ತಕ್ಷಣ ಕೈ ಬಿಡಬೇಕು’ ಎಂದು ಆಗ್ರಹಿಸಿದ ಅವರು, ‘ಅಬ್ದುಲ್ ಕಲಾಂ, ಸಂತ ಶಿಶುನಾಳ ಷರೀಫ, ಮೀರ್ ಸಾಬ್ ಅವರ ಜಯಂತಿ ಆಚರಿಸಲಿ’ ಎಂದು ಸಲಹೆ ನೀಡಿದರು.

***

ಸಚಿವರ ಮಧ್ಯೆ ‘ಸ್ಥಳ ಸಂಘರ್ಷ’

ಟಿಪ್ಪು ಜಯಂತಿ ಆಚರಣೆಯ ಸ್ಥಳ ನಿಗದಿ ಬಗ್ಗೆ ಮೈತ್ರಿ ಸರ್ಕಾರದ ಸಚಿವರ ನಡುವೆ ಸಂಘರ್ಷ ಉಂಟಾಗಿದೆ.

‘ಕಾನೂನು ಸುವ್ಯವಸ್ಥೆ ಹಾಗೂ ಸುರಕ್ಷತೆ ದೃಷ್ಟಿಯಿಂದ ಟಿಪ್ಪುಜಯಂತಿ ಆಚರಣೆಯನ್ನು ವಿಧಾನಸೌಧದ ಬ್ಯಾಂಕ್ವೆಟ್‌ ಸಭಾಂಗಣದ ಬದಲು ರವೀಂದ್ರ ಕಲಾಕ್ಷೇತ್ರದಲ್ಲಿ ಮಧ್ಯಾಹ್ನ 2 ಗಂಟೆ ಒಳಗೆ ಮಾಡಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.

‘ಕಳೆದ ಬಾರಿ ಬ್ಯಾಂಕ್ಟೆಟ್ ಹಾಲ್‌ನಲ್ಲಿ ಆಚರಣೆ ವೇಳೆ ಸಾಕಷ್ಟು ಸಮಸ್ಯೆ ಉಂಟಾಗಿತ್ತು. ಹೀಗಾಗಿ ಸ್ಥಳ ಬದಲಾವಣೆ ಮಾಡಿದ್ದೇವೆ’ ಎಂದು ಅವರು ಸಮಜಾಯಿಷಿ ನೀಡಿದರು. ‘ಕಳೆದ ಬಾರಿಯಂತೆ ಈ ಸಲವೂ ಬ್ಯಾಂಕ್ವೆಟ್‌ ಹಾಲ್‌ನಲ್ಲೇ ಸಂಜೆ 6.30ರ ನಂತರ ಜಯಂತಿ ನಡೆಯಲಿದೆ. ಇದಕ್ಕೆ ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದಾರೆ. ಅದಕ್ಕಾಗಿ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ’ ಎಂದು ಸಚಿವ ಜಮೀರ್‌ ಅಹ್ಮದ್‌ ಖಾನ್‌ ತಿಳಿಸಿದರು.

****

ಕಲಾಕ್ಷೇತ್ರದಲ್ಲಿ ಟಿಪ್ಪು ಜಯಂತಿ

ಕಾನೂನು ಸುವ್ಯವಸ್ಥೆ ಹಾಗೂ ಸುರಕ್ಷತೆ ದೃಷ್ಟಿಯಿಂದ ಟಿಪ್ಪುಜಯಂತಿ ಆಚರಣೆಯನ್ನು ವಿಧಾನಸೌಧದ ಬ್ಯಾಂಕ್ವೆಟ್‌ ಸಭಾಂಗಣದ ಬದಲು ರವೀಂದ್ರ ಕಲಾಕ್ಷೇತ್ರದಲ್ಲಿ ಮಧ್ಯಾಹ್ನ 2 ಗಂಟೆ ಒಳಗೆ ಮಾಡಲು ತೀರ್ಮಾನಿಸಲಾಗಿದೆ ಎಂದರು.

‘ಕಳೆದ ಬಾರಿ ಬ್ಯಾಂಕ್ಟೆಟ್ ಹಾಲ್‌ನಲ್ಲಿ ಆಚರಣೆ ವೇಳೆ ಸಾಕಷ್ಟು ಸಮಸ್ಯೆ ಉಂಟಾಗಿತ್ತು. ಹೀಗಾಗಿ ಸ್ಥಳ ಬದಲಾವಣೆ ಮಾಡಿದ್ದೇವೆ’ ಎಂದು ಅವರು ಸಮಜಾಯಿಷಿ ನೀಡಿದರು.

***

ಟಿಪ್ಪು ಜಯಂತಿ ಮಾಡದಿದ್ದರೆ ಮೈತ್ರಿ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ಸಿದ್ದರಾಮಯ್ಯ ವಾಪಸ್ ಪಡೆಯಬಹುದು ಎಂಬ ಆತಂಕ ಕುಮಾರಸ್ವಾಮಿ ಅವರಲ್ಲಿ ಇದ್ದಂತಿದೆ

-ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ

ಕನ್ನಡ ಭವನಗಳಲ್ಲಿ ಟಿಪ್ಪು ಜಯಂತಿ ಆಚರಿಸಿದರೆ ಕನ್ನಡಿಗರಿಗೂ ಅವಮಾನ ಮಾಡಿದಂತಾಗುತ್ತದೆ. ಕನ್ನಡ ವಿರೋಧಿಯ ಜಯಂತಿಯನ್ನು ಕನ್ನಡಿಗರ ತೆರಿಗೆ ಹಣದಲ್ಲಿ ಏಕೆ ನಡೆಸಬೇಕು
-ಆರ್‌.ಅಶೋಕ, ಬಿಜೆಪಿ ಶಾಸಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT