ಹೊಸಪೇಟೆ: ‘ಫೆ. 14ರಂದು ನಗರದಲ್ಲಿ ನಡೆಯಲಿರುವ ‘ಪ್ರಬುದ್ಧ’ರ ಸಮ್ಮೇಳನದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾಪಾಲ್ಗೊಳ್ಳುವರು’ ಎಂದು ಪಕ್ಷದ ತಾಲ್ಲೂಕು ಅಧ್ಯಕ್ಷ ಅನಂತ ಪದ್ಮನಾಭ ತಿಳಿಸಿದರು.
ಬುಧವಾರ ಸಂಜೆ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಸಂಜೆ 6ಕ್ಕೆ ನಡೆಯಲಿರುವ ಸಮ್ಮೇಳನದಲ್ಲಿ ಬಳ್ಳಾರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಯ ವೈದ್ಯರು, ಎಂಜಿನಿಯರ್, ರೈತರು, ವಿದ್ಯಾರ್ಥಿಗಳು ಸೇರಿದಂತೆ ವಿವಿಧ ವಲಯದ ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುವರು’ ಎಂದು ಮಾಹಿತಿ ನೀಡಿದರು.
‘ಅಮಿತ್ ಶಾ ಸಮ್ಮೇಳನದಲ್ಲಿ ಪಾಲ್ಗೊಂಡವರ ಜತೆ ಸಂವಾದ ನಡೆಸುವರು. ಬಳಿಕ ಅವರು, ಲೋಕಸಭೆ ಚುನಾವಣೆಗೆ ಪಕ್ಷದ ಪ್ರಣಾಳಿಕೆ ಬಗ್ಗೆ ಅಭಿಪ್ರಾಯ ಪಡೆಯುವರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು, ಮೂರು ಜಿಲ್ಲೆಗಳ ಚುನಾಯಿತ ಪ್ರತಿನಿಧಿಗಳು ಪಾಲ್ಗೊಳ್ಳುವರು’ ಎಂದು ವಿವರಿಸಿದರು.