ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ, ಎಲ್ಲ ಸೌಲಭ್ಯಗಳನ್ನು ವಿಸ್ತರಿಸಬೇಕೆಂದು ಆಗ್ರಹಿಸಿ ಸಾರಿಗೆ ನೌಕರರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನನಿರತರನ್ನು ಭೇಟಿಯಾದ ಸಾರಿಗೆ ಸಚಿವ ಲಕ್ಷ್ಮಣ ಸವದಿ, ನೌಕರರ ಬೇಡಿಕೆಯನ್ನು ಸಹಾನುಭೂತಿಯಿಂದ ಪರಿಶೀಲಿಸಿದ ಬಳಿಕ ಮುಖ್ಯಮಂತ್ರಿ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಸಾರಿಗೆ ನೌಕರರನ್ನು 2020ರ ಜ.1ರಿಂದ ಜಾರಿಗೆ ಬರುವಂತೆ ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ವಿಧಾನಮಂಡಲ ಬಜೆಟ್ ಅಧಿವೇಶನದಲ್ಲೇ ಬೇಡಿಕೆ ಕುರಿತು ಚರ್ಚಿಸಿ, ತೀರ್ಮಾನಿಸಬೇಕು. ಅಗತ್ಯವಿರುವ ಹಣವನ್ನು ಬಜೆಟ್ನಲ್ಲಿ ಮೀಸಲಿಡಬೇಕು ಎಂದು ಆಗ್ರಹಿಸಿದರು.
ಶೇಕಡಾ 57ರಷ್ಟಿರುವ ವೇತನ ತಾರತಮ್ಯ ನಿವಾರಿಸಿ, ಪಿಂಚಣಿ ಸೌಲಭ್ಯ ಒದಗಿಸಬೇಕು. ನಿವೃತ್ತ ಸಿಬ್ಬಂದಿಗೂ ಪಿಂಚಣಿ ದೊರೆಯಬೇಕು. ಅಂತರ ನಿಗಮ ವರ್ಗಾವಣೆಯನ್ನು ಮತ್ತೆ ಆರಂಭಿಸಬೇಕು ಎಂದರು.