ಬೆಂಗಳೂರು:ಸಣ್ಣ– ಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ ಮೈಸೂರು, ತುಮಕೂರು, ಶಿವಮೊಗ್ಗ ಮಹಾನಗರ ಪಾಲಿಕೆಗಳು ಮತ್ತು 102 ನಗರ ಸ್ಥಳೀಯ ಸಂಸ್ಥೆಗಳಿಗೆ ಶುಕ್ರವಾರ ನಡೆದ ಮತದಾನ ಶಾಂತಿಯುತವಾಗಿ ನಡೆಯಿತು.
ಮೂರು ಮಹಾನಗರ ಪಾಲಿಕೆಗಳಲ್ಲಿ ಸುಮಾರು ಶೇ 55 ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಶೇ 65 ರಷ್ಟು ಮತದಾನವಾಗಿದೆ. ಅಂತಿಮ ಮಾಹಿತಿ ತಡ ರಾತ್ರಿ ಸಿಗಲಿದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಶ್ರೀನಿವಾಸಚಾರಿ ‘ಪ್ರಜಾವಾಣಿ’ಗೆ ತಿಳಿಸಿದರು.
ನಗರ ಸ್ಥಳೀಯ ಸಂಸ್ಥೆಗಳಿಗೆ ಹೋಲಿಸಿದರೆ ಮೂರು ಮಹಾನಗರ ಪಾಲಿಕೆಗಳಲ್ಲಿ ಮತದಾನ ನೀರಸವಾಗಿತ್ತು. 9,121 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ವಿವಿಧ ನಗರಸಭೆಗಳ 12 ವಾರ್ಡ್ಗಳು ಮತ್ತು ಪುರಸಭೆಗಳ 17 ವಾರ್ಡ್ಗಳಿಗೆ ಒಟ್ಟು 29 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮತ ಎಣಿಕೆ ಸೋಮವಾರ ನಡೆಯಲಿದೆ.
ಮೂರು ಮಹಾನಗರ ಪಾಲಿಕೆಗಳಲ್ಲಿ ಮೈಸೂರು ಮತ್ತು ತುಮಕೂರುಗಳಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಜಂಟಿಯಾಗಿ ಸೆಣಸಿವೆ. ಶಿವಮೊಗ್ಗದಲ್ಲಿ ಬಿಜೆಪಿ– ಜೆಡಿಎಸ್ ದೋಸ್ತಿ ಮಾಡಿಕೊಂಡಿರುವುದು ಈ ಚುನಾವಣೆಯ ವಿಶೇಷ.
ಚಿತ್ರದುರ್ಗದಲ್ಲಿ ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಮತ್ತು ಜೆಡಿಎಸ್ ಕಾರ್ಯಕರ್ತರ ಮಧ್ಯೆ ವಾಕ್ಸಮರ ನಡೆಯಿತು. ಗದಗ್ನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಬೀದರ್ ಜಿಲ್ಲೆ ಹಳ್ಳಿಖೇಡ ಪುರಸಭೆ ವ್ಯಾಪ್ತಿಯಲ್ಲಿಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡುವಂತೆ ಹೇಳುತಿದ್ದ ವ್ಯಕ್ತಿಗೆ ಪೊಲೀಸರಿಂದ ಲಾಠಿ ಏಟು ನೀಡಿದರು.