ರಾಯಚೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಗಳನ್ನು ಪತ್ತೆ ಮಾಡುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದಿದ್ದು, ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಕಲ್ಲುತೂರಾಟ ನಡೆಯಿತು.
ಜಿಲ್ಲಾಧಿಕಾರಿ ಕಚೇರಿಗೆಮನವಿ ಸಲ್ಲಿಸಲು ಬಂದವರನ್ನೆಲ್ಲ ಪೊಲೀಸರು ಮುಖ್ಯದ್ವಾರದಲ್ಲಿಯೇ ತಡೆದು ನಿಲ್ಲಿಸಿದರು. ಈ ವೇಳೆ ಆಕ್ರೋಶಗೊಂಡ ಕೆಲವರು ಪೊಲೀಸರ ಮೇಲೆ ನೀರಿನ ಪಾಕೇಟ್, ಕಲ್ಲು ಹಾಗೂ ಚಪ್ಪಲಿಗಳನ್ನು ತೂರಿದರು. ಕೆಲ ಪೊಲೀಸರಿಗೆ ಸಣ್ಣ ಪ್ರಮಾಣದ ಗಾಯಗಳಾದವು. ಜಿಲ್ಲಾ ವಿಶ್ವಕರ್ಮ ಸಮಾಜದ ಅಧ್ಯಕ್ಷ ಗುರು ಅವರ ಕಣ್ಣಿನ ಮೇಲೆ ಪೆಟ್ಟಾಯಿತು.
ಪೊಲೀಸರು ಲಾಠಿ ಬೀಸಿ ಗುಂಪನ್ನು ಚದುರಿಸಿದರು. ಜಿಲ್ಲಾಧಿಕಾರಿ ಶರತ್ ಬಿ. ಕೂಡಲೇ ಸ್ಥಳಕ್ಕೆ ಬಂದರು. ಪೊಲೀಸ್ ವಾಹನದ ಧ್ವನಿವರ್ಧಕದ ಮೂಲಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿಪರಿಸ್ಥಿತಿ ನಿಯಂತ್ರಣಕ್ಕೆ ತಂದರು. ಮೃತ ವಿದ್ಯಾರ್ಥಿನಿಯ ತಾಯಿ ಮಾತನಾಡಿ,ಗಲಾಟೆ ಮಾಡಬಾರದು ಎಂದು ಮನವಿ ಮಾಡಿದರು.
ಪ್ರತಿಭಟನೆ ವೇಳೆ ವಿಶ್ವಕರ್ಮ ಸಮಾಜದ ಮುಖಂಡ ಮಾರುತಿ ಬಡಿಗೇರ ಅವರು ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಅಸ್ವಸ್ಥರಾಗಿದ್ದರಿಂದ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಒಬ್ಬ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೊದಲೇ ನಿರ್ಧರಿಸಿದಂತೆ ಜಿಲ್ಲಾ ವಿಶ್ವಕರ್ಮ ಸಮಾಜವು ಮಾಣಿಕಪ್ರಭು ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ನಡೆಸಿತು. ಇದರೊಂದಿಗೆ ಜೈನ ಸಮಾಜದ ಮಹಿಳೆಯರು, ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರು, ಎಐಡಿಎಸ್ಒ, ಎಸ್ಎಫ್ಐ, ಎಐಡಿವೈಒ ಹಾಗೂ ಎಬಿವಿಪಿ ಹಾಗೂ ಯುವ ಕಾಂಗ್ರೆಸ್ ಸೇರಿದಂತೆ ಅನೇಕ ಸಂಘಟನೆಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು.
‘ಸಾವಿಗೆ ನ್ಯಾಯ ಸಿಗಬೇಕು ಎಂದು ಪ್ರತಿಭಟನೆ ಮಾಡುತ್ತಿದ್ದೇವೆ. ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿದ್ದೇವೆ. ಇಂತಹ ಘಟನೆಗಳು ಮರುಕಳಿಸಬಾರದು. ಸಿಐಡಿ ತನಿಖೆ ಕ್ಷೀಪ್ರ ಗತಿಯಲ್ಲಿ ನಡೆಯಬೇಕಿದೆ’ ಎಂದು ನಟ ಭುವನ ಮತ್ತು ನಟಿ ಹರ್ಷಿಕಾ ಪೂಣಚ್ಚ ಹೇಳಿದರು.
‘ಈ ಕೃತ್ಯದಲ್ಲಿ ಯಾರೇ ಭಾಗಿಯಾದರೂ ಕ್ರಮವಾಗಬೇಕು. ಸಿಐಡಿ ತನಿಖೆ ನಡೆಯುತ್ತಲೇ ಇರುತ್ತದೆ. ಬೇಗನೆ ವರದಿ ಸಿಗುವುದಿಲ್ಲ. ಹೀಗಾಗಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕು. ವಿದ್ಯಾರ್ಥಿನಿ ಸಾವಿಗೆ ನ್ಯಾಯ ಸಿಗುವವರೆಗೂ ಹೋರಾಟ ನಡೆಯುತ್ತಲೇ ಇರುತ್ತದೆ’ ಎಂದರು.
ಆರೋಪಿ ಮನೆಗೆ ಸಿಐಡಿ:ತನಿಖೆಯನ್ನು ಚುರುಕುಗೊಳಿಸಿರುವ ಸಿಐಡಿ ತಂಡವು ಆರೋಪಿ ಸುದರ್ಶನ ಯಾದವನನ್ನು ಮನೆಗೆ ಕರೆದುಕೊಂಡು ಹೋಗಿ ಪರಿಶೀಲನೆ ನಡೆಸಿತು. ಆನಂತರ ವಿದ್ಯಾರ್ಥಿನಿ ಶವ ದೊರೆತ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.