ಬೆಳಗಾವಿ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ನಾನಾಗಲೀ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಡಿ.ವಿ. ಸದಾನಂದಗೌಡ ಹಾಗೂ ನಿರ್ಮಲಾ ಸೀತಾರಾಮನ್ ಅವರಾಗಲೀ ಕೈ ಹಾಕಿಲ್ಲ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.
‘ಯಡಿಯೂರಪ್ಪ ಅವರನ್ನು ಮುಗಿಸಲು ಕರ್ನಾಟಕದ ಇಬ್ಬರು ಕೇಂದ್ರ ಸಚಿವರು ಪ್ರಯತ್ನಿಸುತ್ತಿದ್ದಾರೆ’ ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿದರು.
‘ಕೇಂದ್ರ ಸಚಿವರಾದ ನಾವೆಲ್ಲರೂ ಯಡಿಯೂರಪ್ಪ ನಮ್ಮ ನಾಯಕ ಎಂದು ಒಪ್ಪಿದ್ದೇವೆ. ಅವರು ರಾಜ್ಯದಲ್ಲಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಅವರಷ್ಟು ಸುತ್ತಾಡುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ನಮ್ಮದು ಶಿಸ್ತಿನ ಪಕ್ಷ. ವರಿಷ್ಠರ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಯಡಿಯೂರಪ್ಪ ವಿರುದ್ಧ ಯಾರು ಷಡ್ಯಂತ್ರ ಮಾಡುತ್ತಿದ್ದಾರೆಯೋ ಗೊತ್ತಿಲ್ಲ’ ಎಂದು ಪ್ರತಿಕ್ರಿಯಿಸಿದರು.
‘ಮುಖ್ಯಮಂತ್ರಿ ಬಹಳ ಸ್ಟ್ರಾಂಗ್ ಇದ್ದಾರೆ. ಯತ್ನಾಳ್ ಯಾವ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ಅದನ್ನು ಅವರೇ ಸ್ಪಷ್ಟಪಡಿಸಬೇಕು’ ಎಂದರು.
‘ಯತ್ನಾಳ ಅವರಿಗೆ ಕಿವಿಮಾತು ಹೇಳುವಷ್ಟು ನಾನು ದೊಡ್ಡವನಲ್ಲ’ ಎಂದರು.