ಬೆಂಗಳೂರು: ‘ಕಲಾವಿದರ ಅಭಿವ್ಯಕ್ತಿ ಸ್ವಾತಂತ್ರ್ಯರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಅವರಿಗೆ ಅಗೌರವ ತರುವಂತಹ ಯಾವುದೇ ಪ್ರಯತ್ನಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ವಿವಿಧ ಅಕಾಡೆಮಿಗಳಿಗೆ ನೇಮಕ ಮಾಡುವಾಗ ‘ಮನೆಹಾಳು’ ಜನರನ್ನು ದೂರ ಇಟ್ಟಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಹೇಳಿಕೆ ನೀಡಿದ್ದನ್ನು ಖಂಡಿಸಿ ಕಲಾವಿದರು ಹಾಗೂ ಸಾಹಿತಿಗಳನ್ನು ಒಳಗೊಂಡ ನಿಯೋಗ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಗುರುವಾರ ಮನವಿ ಸಲ್ಲಿಸಿತ್ತು. ಈ ಮನವಿಗೆ ಸ್ಪಂದಿಸಿ ಅವರು ಟ್ವೀಟ್ ಮಾಡಿದ್ದಾರೆ.
‘ರಾಜ್ಯದಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಶ್ರೀಮಂತಗೊಳಿಸಲು ಸಾಹಿತಿಗಳು, ಕಲಾವಿದರು ನೀಡಿರುವ ಕೊಡುಗೆ ಬಗ್ಗೆ ಅಪಾರ ಅಭಿಮಾನ, ಗೌರವ ಇದೆ’ ಎಂದು ಹೇಳಿದ್ದಾರೆ.