ಬೆಳಗಾವಿ: ‘ನಿಖಿಲ್ ಎಲ್ಲಿದ್ದೀಯಪ್ಪಾ?’ ಚಲನಚಿತ್ರ ನಿರ್ಮಾಣವಾದರೆ, ಅವಕಾಶ ದೊರೆತರೆ ನಟಿಸಲು ಸಿದ್ಧ’ ಎಂದು ಚಲನಚಿತ್ರ ನಟಿ ತಾರಾ ತಿಳಿಸಿದರು.
ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಥೆ ಚೆನ್ನಾಗಿದ್ದರೆ, ಇಷ್ಟವಾದರೆ ನಟಿಸುತ್ತೇನೆ. ಆ ಚಲನಚಿತ್ರಕ್ಕೆ ನಿಖಿಲ್ ಕುಮಾರಸ್ವಾಮಿಯೇ ನಾಯಕ ನಾಟನಾದರೂ ಪರವಾಗಿಲ್ಲ’ ಎಂದು ಪ್ರತಿಕ್ರಿಯಿಸಿದರು.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರ ಮಾಡುತ್ತಿರುವ ದರ್ಶನ್ ಹಾಗೂ ಯಶ್ ಬಗ್ಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೀಡುತ್ತಿರುವ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸಿದ ತಾರಾ, ‘ಮುಖ್ಯಮಂತ್ರಿ ವೈಯಕ್ತಿಕವಾಗಿ ಮಾತನಾಡಬಾರದು’ ಎಂದರು.
‘ಮಂಡ್ಯದಲ್ಲಿ ಸುಮಲತಾ ಅವರಿಗೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಿದೆ. ರಾಜ್ಯವೂ ಸೇರಿದಂತೆ ದೇಶದೆಲ್ಲೆಡೆ ನರೇಂದ್ರ ಮೋದಿ ಅಲೆ ಇದೆ. ದೇಶದ ಸುರಕ್ಷತೆಗಾಗಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಜನರು ಬಯಸಿದ್ದಾರೆ. ಬೆಳಗಾವಿಯಲ್ಲೂ ಬಿಜೆಪಿ ಅಭ್ಯರ್ಥಿ ಗೆಲ್ಲಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.