ಬೆಳಗಾವಿ: ‘ನಾನು ಇನ್ನೂ ಹತ್ತು ವರ್ಷಗಳ ಕಾಲ ರಾಜಕೀಯದಲ್ಲಿ ಇರುತ್ತೇನೆ’ ಎನ್ನುವ ಮೂಲಕ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ಹೇಳಿಕೆಗೆ ಟಾಂಗ್ ನೀಡಿದರು.
‘ಯಡಿಯೂರಪ್ಪ ಅವರಿಗೆ ವಯಸ್ಸಾಯ್ತು’ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಕ್ಕೆ ನಗರದಲ್ಲಿ ಭಾನುವಾರ ಅವರು ಪ್ರತಿಕ್ರಿಯೆ ನೀಡಿದರು. ‘ಸಿದ್ದರಾಮಯ್ಯ ಅವರ ಮೇಲೆ ಗೌರವವಿದೆ. ಅವರೊಂದು ಜವಾಬ್ದಾರಿ ಸ್ಥಾನದಲ್ಲಿರುವವರು. ಅಂತವರು ನನಗೆ ವಯಸ್ಸಾಗಿದೆ ಅಂತಾ ಹೇಳಬೇಕಾ’ ಎಂದರು.
ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಪಕ್ಷದ ವತಿಯಿಂದ ಯಾವ ಅಭ್ಯರ್ಥಿಯನ್ನೂ ಕಣಕ್ಕಿಳಿಸುವುದಿಲ್ಲ. ಅಧಿವೇಶನದಲ್ಲಿ ಯಾವ ರೀತಿ ಹೋರಾಟ ಮಾಡಬೇಕೆನ್ನುವುದನ್ನು ಪಕ್ಷದ ಮುಖಂಡರ ಜೊತೆ ಚರ್ಚಿಸಿ, ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದರು.