ಮೈಸೂರು: ಹಲ್ಲೆ ನಡೆಸಿದವರ ಮೇಲೆ ಕೇರಳ ಮತ್ತು ಉತ್ತರ ಪ್ರದೇಶ ಮಾದರಿಯಲ್ಲಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಇಂದೇ ಸುಗ್ರೀವಾಜ್ಞೆ ಹೊರಡಿಸಲಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ರಾಜ್ಯದಲ್ಲಿ ಕೊರೊನಾ ಶಂಕಿತರ ಚಿಕಿತ್ಸೆಗೆಂದು ಹೋದಾಗ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗಳಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ವಹಿಸಲಾಗುತ್ತಿದೆ.
ಅಲ್ಲಿಯ ಕಾನೂನಿಗಿಂತಲೂ ಕಠಿಣ ಕ್ರಮಗಳನ್ನು ಸೇರಿಸಿ ಸುಗ್ರೀವಾಜ್ಞೆ ಆದೇಶ ಹೊರಬೀಳಲಿದೆ. ಬಳಿಕ ಹಲ್ಲೆಕೋರರನ್ನು ಬಂಧಿಸಿ ಜೈಲಿಗಟ್ಟಲಾಗುವುದು ಎಂದರು.
ಸರ್ಕಾರವು ಆಶಾ ಕಾರ್ಯಕರ್ತೆಯರ ಪರವಾಗಿದೆ. ಇನ್ನು ಇಂತಹ ಹಲ್ಲೆ ಪ್ರಕರಣಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ. ಯಾವುದೇ ಕಾರಣಕ್ಕೂ ಇಂತಹ ಘಟನೆಯನ್ನು ಸಹಿಸುವುದಿಲ್ಲ ಎಂದು ತಿಳಿಸಿದರು.