ತುಮಕೂರು: ‘ಸಚಿವ ಸಂಪುಟ ರಚನೆಯಾದ ಬಳಿಕ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರ ಪತನವಾಗಲಿದೆ. ಆದರೆ, ರೈತರ ಸಾಲ ಮನ್ನಾ ಮಾಡುವವರೆಗಾದರೂ ಈ ಸರ್ಕಾರ ಇರಬೇಕು’ ಎಂದು ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ ಹೇಳಿದರು.
ಗುರುವಾರ ಮಧುಗಿರಿಯಲ್ಲಿ ನಡೆದ ಚುನಾವಣೆ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು ‘ಕುಮಾರಸ್ವಾಮಿ ಅವರೇ ತಮಗೆ ಮುಖ್ಯಮಂತ್ರಿ ಪದವಿ ಬೇಕಾಗಿಲ್ಲ. ರಾಜೀನಾಮೆ ಕೊಟ್ಟು ಹೋಗ್ತೀನಿ ಎಂದು ಹೇಳಿದ್ದಾರೆ. ಹೀಗಾಗಿ, ಮರು ಚುನಾವಣೆ ಯಾವುದೇ ಕ್ಷಣ ದಲ್ಲಾದರೂ ಬರಬಹುದು’ ಎಂದರು.
ಹೋರಾಟ ಮಾಡಬೇಕು: 'ಮುಖ್ಯಮಂತ್ರಿಯಾದ 24 ತಾಸಿನಲ್ಲಿ ಸಾಲ ಮನ್ನಾ ಮಾಡುತ್ತೇನೆ ಎಂದು ಹೇಳಿದ್ದೀರಲ್ಲ. ಯಾಕೆ ಇನ್ನೂ ಮನ್ನಾ ಮಾಡಿಲ್ಲ ಎಂದು ಪ್ರಶ್ನೆ ಮಾಡಬೇಕು. ನಾವೆಲ್ಲ ರಸ್ತೆಗಿಳಿದು ಹೋರಾಟ ಮಾಡಬೇಕು. ಪ್ರತಿ ಕುಟುಂಬಕ್ಕೆ 35 ಕೆ.ಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದೀರಲ್ಲ ಯಾಕೆ ಕೊಟ್ಟಿಲ್ಲ ಎಂದು ಕೇಳಬೇಕು' ಎಂದು ಹೇಳಿದರು.
'ಸ್ವಸಹಾಯ ಸಂಘಗಳ ಸಾಲವನ್ನೂ ಮನ್ನಾ ಮಾಡುತ್ತೇನೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದರು. ಈ ಸಂಘದ ಸದಸ್ಯೆಯರೂ ಮುಖ್ಯಮಂತ್ರಿ ಅವರಿಗೆ ಸಾಲ ಮನ್ನಾ ಮಾಡಲು ಒತ್ತಾಯ ಮಾಡಬೇಕು. ಮಧುಗಿರಿ ತಾಲ್ಲೂಕಿನಲ್ಲಿಯೇ ಸುಮಾರು 20 ಸಾವಿರ ಮಹಿಳೆಯರು ಸ್ವಸಹಾಯ ಸಂಘಗಳಲ್ಲಿ ಸದಸ್ಯರಾಗಿದ್ದಾರೆ. ಅವರೆಲ್ಲ ಕೇಳಬೇಕು' ಎಂದರು.