ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡ ‘ತೌಕ್ತೆ’ ಚಂಡಮಾರುತದ ಪರಿಣಾಮದಿಂದ ಕರಾವಳಿಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಬಿರುಸಿನ ಮಳೆ ಸುರಿಯುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನತೆ ತೊಂದರೆ ಅನುಭವಿಸುವಂತಾಯಿತು. ಜಿಲ್ಲೆಯ ನಗರ ಮತ್ತು ಗ್ರಾಮಾಂತರದಲ್ಲಿ ಭಾರಿ ಮಳೆಯಾಗಿದ್ದು, ಉಳ್ಳಾಲ, ಉಡುಪಿಯ ಮಲ್ಪೆ-ಪಡುಕೆರೆ ಸೇರಿದಂತೆ ಹಲವೆಡೆ ಕಡಲು ಪ್ರಕ್ಷುಬ್ಧವಾಗಿದೆ. ಅಲೆಗಳ ಆರ್ಭಟ ಹೆಚ್ಚಾಗಿದ್ದು, ಸಮುದ್ರ ತೀರದ ಜನರು ಆತಂಕ ಎದುರಿಸುವಂತಾಗಿದೆ. ಈ ನಡುವೆ ಎಂಜಿನ್ ವೈಫಲ್ಯದಿಂದ ಸಮುದ್ರದಲ್ಲಿ ಸಿಲುಕಿದ್ದ ಮೀನುಗಾರಿಕೆ ದೋಣಿಯ ಮೂವರು ಮೀನುಗಾರರನ್ನು ಕರಾವಳಿ ಕಾವಲು ಪಡೆ ರಕ್ಷಣೆ ಮಾಡಿದೆ.