ಬೆಂಗಳೂರು: ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘವು ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆ ಕುರಿತು ತಜ್ಞರಿಂದ ಮಾಹಿತಿ ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರೊಂದಿಗೆ ಸಂವಾದ ಆಯೋಜಿಸಿದೆ.
ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಪ್ರಧಾನ ಕಾರ್ಯದರ್ಶಿಕೆ.ಆರ್.ಮಂಜುನಾಥ್, ‘ಫೆಬ್ರುವರಿ 4ರಂದು ಜಯನಗರದ ಎನ್ಎಂಕೆಆರ್ವಿ ಕಾಲೇಜಿನಲ್ಲಿ ಬೆಳಿಗ್ಗೆ 9 ಗಂಟೆಗೆ ಸಚಿವ ತನ್ವೀರ್ ಸೇಠ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ’ ಎಂದು ತಿಳಿಸಿದರು.
ಸಂಘದ ಅಧ್ಯಕ್ಷ ಕೆ.ಟಿ. ಶ್ರೀಕಂಠೇಗೌಡ, ‘ಪರೀಕ್ಷಾ ಸಿದ್ಧತೆ, ವಿಷಯಗಳ ಗ್ರಹಿಕೆ, ನೆನಪಿನಲ್ಲಿಟ್ಟುಕೊಳ್ಳುವ ಕ್ರಿಯೆ, ಉತ್ತರಿಸುವ ಹಾಗೂ ಹೆಚ್ಚು ಅಂಕ ಗಳಿಸುವ ವಿಧಾನ ಕುರಿತಂತೆ ತಜ್ಞರು ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಲಿದ್ದಾರೆ’ ಎಂದರು.