ಚೆನ್ನೈ: ತೂತ್ತುಕುಡಿಯಲ್ಲಿರುವ ಸ್ಟೆರಲೈಟ್ ತಾಮ್ರ ಸಂಸ್ಕರಣಾ ಘಟಕವನ್ನು ತಕ್ಷಣ ಮುಚ್ಚುವಂತೆ ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ.
ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಬುಧವಾರ ಈ ಆದೇಶ ಹೊರಡಿಸಿದ್ದಾರೆ. ತಕ್ಷಣವೇ ಸ್ಟೆರಲೈಟ್ ತಾಮ್ರ ಸಂಸ್ಕರಣಾ ಘಟಕಕ್ಕೆ ವಿದ್ಯುತ್ ಪೂರೈಕೆ ನಿಲ್ಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ. ಅದರಂತೆ ಗುರುವಾರ ಬೆಳಗ್ಗ 5.15ಕ್ಕೆ ವಿದ್ಯುತ್ ಪೂರೈಕೆಯನ್ನು ನಿಲ್ಲಿಸಲಾಗಿದೆ ಎಂದು ವರದಿಯಾಗಿದೆ.
ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಮೇ 18, 19ರಂದು ಸ್ಟೆರಲೈಟ್ ತಾಮ್ರ ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮಲಿನಕಾರಕ ಅಂಶಗಳು ಪತ್ತೆಯಾಗಿದ್ದರಿಂದ ಘಟಕವನ್ನು ಮುಚ್ಚುವಂತೆ ಅಧಿಕಾರಿಗಳು ಶಿಫಾರಸ್ಸು ಮಾಡಿದ್ದರು.
ಸ್ಟೆರಲೈಟ್ ತಾಮ್ರ ಸಂಸ್ಕರಣಾ ಘಟಕವನ್ನು ಮುಚ್ಚುವಂತೆ ರೈತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ನಡೆದ ಗೋಲಿಬಾರ್ಗೆ 12 ಜನರು ಬಲಿಯಾಗಿದ್ದರು.