ಕೊಲಂಬೊ:ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದೇಶವ್ಯಾಪಿ ತಲೆದೋರಿದ್ದ ಪ್ರತಿಭಟನೆಯನ್ನು ಹತ್ತಿಕ್ಕಲು ಜಾರಿಗೊಳಿಸಿದ್ದ ತುರ್ತು ಪರಿಸ್ಥಿತಿಯನ್ನು ಶುಕ್ರವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಶ್ರೀಲಂಕಾ ಸರ್ಕಾರ ಹಿಂತೆಗೆದುಕೊಂಡಿದೆ.
ಸುಮಾರು 2 ವಾರದಿಂದ ತುರ್ತು ಪರಿಸ್ಥಿತಿ ಜಾರಿಯಲ್ಲಿತ್ತು. ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸ್ಥಿತಿಯು ಸುಧಾರಿಸಿರುವ ಹಿನ್ನೆಲೆಯಲ್ಲಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಅಧ್ಯಕ್ಷರ ಕಾರ್ಯಾಲಯ ಪ್ರಕಟಿಸಿದೆ.
ಪ್ರತಿಭಟನೆಯನ್ನು ಹತ್ತಿಕ್ಕಲು ಜನರನ್ನು ಬಂಧಿಸುವ ಮತ್ತು ತಮ್ಮ ವಶದಲ್ಲಿ ಇಟ್ಟುಕೊಳ್ಳುವ ಮುಕ್ತ ಅಧಿಕಾರವನ್ನು ತುರ್ತುಪರಿಸ್ಥಿತಿಯ ಅವಧಿಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ಪೊಲೀಸರಿಗೆ ನೀಡಲಾಗುತ್ತದೆ.
ಆರ್ಥಿಕ ಬಿಕ್ಕಟ್ಟಿನ ಕಾರಣ ಅಧ್ಯಕ್ಷರ ರಾಜೀನಾಮೆಗೆ ಆಗ್ರಹಪಡಿಸಿ ದ್ವೀಪರಾಷ್ಟ್ರದಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಸುಮಾರು 9 ಜನರು ಮೃತಪಟ್ಟಿದ್ದು, 200ಕ್ಕೂ ಅಧಿಕ ಜನರು ಗಾಯಗೊಂಡಿದ್ದರು.