‘ಭಾರತದಲ್ಲಿ ಕೆಲವರು ಧಾರ್ಮಿಕ ವ್ಯಕ್ತಿಯನ್ನು ಉದ್ದೇಶಿಸಿ ಅವಹೇಳನಕಾರಿ ಟ್ವೀಟ್ ಮಾಡಿರುವ ಬಗ್ಗೆ ಕತಾರ್ ವಿದೇಶಾಂಗ ಸಚಿವಾಲಯ ಕಳವಳ ವ್ಯಕ್ತಪಡಿಸಿದೆ. ಆ ಟ್ವೀಟ್ಗಳು ಯಾವುದೇ ಕಾರಣಕ್ಕೂ ಭಾರತ ಸರ್ಕಾರದ ಅಭಿಪ್ರಾಯಗಳಲ್ಲ. ಅವು ಕೆಲವೇ ಕ್ಷುಲ್ಲಕ ವ್ಯಕ್ತಿಗಳಿಗೆ ಸಂಬಂಧಿಸಿದ್ದಾಗಿದೆ. ನಾಗರಿಕತೆಯ ಪರಂಪರೆ ಹಾಗೂ ವಿವಿಧತೆಯಲ್ಲಿ ಏಕತೆಯ ಸಂಸ್ಕೃತಿಯ ತತ್ವದಲ್ಲಿ ನಂಬಿಕೆ ಇರಿಸಿರುವ ಭಾರತವು ಎಲ್ಲ ಧರ್ಮಗಳನ್ನೂ ಸಮಾನವಾಗಿ ಗೌರವಿಸುತ್ತದೆ. ಅವಹೇಳನಕಾರಿ ಹೇಳಿಕೆ ನೀಡಿದವರ ವಿರುದ್ಧ ಈಗಾಗಲೇ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಎಲ್ಲ ಧರ್ಮಗಳನ್ನು ಸಮಾನವಾಗಿ ಗೌರವಿಸುವುದಕ್ಕೆ ಸಂಬಂಧಿಸಿದ ಸರ್ಕಾರಿ ಹೇಳಿಕೆಯನ್ನೂ ಬಿಡುಗಡೆ ಮಾಡಲಾಗಿದೆ. ಈ ಅವಹೇಳನಕಾರಿ ಹೇಳಿಕೆಯನ್ನು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಕತಾರ್–ಭಾರತದ ನಡುವಣ ಬಾಂಧವ್ಯಕ್ಕೆ ಧಕ್ಕೆ ತರುವಂತೆ ಮಾಡಲು ಬಿಡಬಾರದು. ನಮ್ಮ ದ್ವಿಪಕ್ಷೀಯ ಬಾಂಧವ್ಯಕ್ಕೆ ಧಕ್ಕೆ ತರಲು ಯತ್ನಿಸುವ ಇಂಥ ಶಕ್ತಿಗಳ ವಿರುದ್ಧ ನಾವು ಜತೆಯಾಗಿ ನಿಲ್ಲಬೇಕು’ ಎಂದು ಭಾರತೀಯ ರಾಯಭಾರ ಕಚೇರಿ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.