ಮಾಸ್ಕೋ (ರಷ್ಯಾ): ಭಾರತ ಮತ್ತು ಚೀನಾದ ವಿದೇಶಾಂಗ ಸಚಿವರಾದ ಎಸ್. ಜೈಶಂಕರ್ ಮತ್ತು ವಾಂಗ್ ಯಿ ಅವರು ಮಾಸ್ಕೊದಲ್ಲಿ ಗುರುವಾರ ಭೇಟಿಯಾಗಿದ್ದಾರೆ.ಶಾಂಘೈ ಸಹಕಾರ ಸಂಘಟನೆ (ಎಸ್ಸಿಒ) ಸಮಾವೇಶದ ಸಂದರ್ಭದಲ್ಲಿ ಈ ಭೇಟಿ ನಡೆಯಿತು.
ಗಡಿಯಲ್ಲಿನ ಸಂಘರ್ಷ ತಪ್ಪಿಸುವುದಕ್ಕಾಗಿ ದ್ವಿಪಕ್ಷೀಯವಾದ ಎಲ್ಲ ಒಪ್ಪಂದಗಳಿಗೆ ಚೀನಾವು ಕಟ್ಟುನಿಟ್ಟಿನ ಬದ್ಧತೆ ತೋರಬೇಕು ಎಂದು ಜೈಶಂಕರ್ ಅವರು ವಾಂಗ್ಗೆ ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಜೈಶಂಕರ್ ಮತ್ತು ವಾಂಗ್ ನಡುವೆ ರಷ್ಯಾದ ವಿದೇಶಾಂಗ ಸಚಿವ ಸರ್ಗೆಯ್ ಲಾವ್ರೊವ್ ಅವರ ಸಮ್ಮುಖದಲ್ಲಿಯೂ ಒಂದು ಸಭೆ ನಡೆದಿದೆ. ಭಾರತ–ಚೀನಾ ಗಡಿ ಬಿಕ್ಕಟ್ಟು ನಿವಾರಣೆಗೆ ಲಾವ್ರೊವ್ ಅವರೂ ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.
ಚೀನಾ ಜತೆಗಿನ ಬಿಕ್ಕಟ್ಟನ್ನು ಮಾತುಕತೆ ಮೂಲಕ ಪರಿಹರಿಸಲು ಭಾರತ ಬದ್ಧ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ.ಜೈಶಂಕರ್–ವಾಂಗ್ ಭೇಟಿಯ ಬೆನ್ನಿಗೇ ಈ ಹೇಳಿಕೆ ಹೊರಬಿದ್ದಿದೆ.