ಇಸ್ಲಾಮಾಬಾದ್:ಕರ್ನಾಟಕದಲ್ಲಿ ತಲೆದೋರಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕಳವಳ ವ್ಯಕ್ತಪಡಿಸಿರುವ ಪಾಕಿಸ್ತಾನವು, ಭಾರತದ ರಾಜತಾಂತ್ರಿಕ ಅಧಿಕಾರಿಗಳಿಗೆ ವಿದೇಶಾಂಗ ಸಚಿವಾಲಯದಲ್ಲಿ ಸಮನ್ಸ್ ಜಾರಿಗೊಳಿಸಿದೆ.
ಭಾರತದಲ್ಲಿ ಮುಸ್ಲಿಮರ ವಿರುದ್ಧಧಾರ್ಮಿಕ ಅಸಹಿಷ್ಣುತೆ, ತಾರತಮ್ಯ ಹಾಗೂ ನಕಾರಾತ್ಮಕ ನಿಲುವುಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈ ಬಗ್ಗೆ ಪಾಕಿಸ್ತಾನ ಗಂಭೀರವಾಗಿ ಕಳವಳ ವ್ಯಕ್ತಪಡಿಸುತ್ತದೆ ಎಂದು ಭಾರತದ ರಾಜತಾಂತ್ರಿಕ ಅಧಿಕಾರಿಗಳಿಗೆ ತಿಳಿಸಿರುವುದಾಗಿ ಅಲ್ಲಿನ ವಿದೇಶಾಂಗ ಸಚಿವಾಲಯ ಪ್ರಕಟಿಸಿದೆ.
ಭಾರತ ಸರ್ಕಾರವು, ಮುಸ್ಲಿಂ ಮಹಿಳೆಯರ ಸುರಕ್ಷತೆ, ಭದ್ರತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಲು, ಕರ್ನಾಟಕದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುತ್ತಿರುವವರ ವಿರುದ್ಧ ಗಂಭೀರ ಮತ್ತು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದೂ ಒತ್ತಾಯಿಸಿದೆ.
ಇದಕ್ಕೂ ಮುನ್ನ,'ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸುವುದು ಮೂಲಭೂತ ಮಾನವ ಹಕ್ಕುಗಳ ಘೋರ ಉಲ್ಲಂಘನೆಯಾಗಿದೆ. ಯಾರಿಗಾದರೂ ಮೂಲಭೂತ ಹಕ್ಕನ್ನು ನಿರಾಕರಿಸುವುದು ಮತ್ತು ಹಿಜಾಬ್ ಧರಿಸಿದ್ದಕ್ಕಾಗಿ ಅವರನ್ನು ಬೆದರಿಸುವುದು ಸಂಪೂರ್ಣವಾಗಿ ದಬ್ಬಾಳಿಕೆಯಾಗಿದೆ' ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹ್ಮೂದ್ ಖುರೇಷಿ ಟ್ವಿಟರ್ನಲ್ಲಿ ಟೀಕಿಸಿದ್ದರು.
Depriving Muslim girls of an education is a grave violation of fundamental human rights. To deny anyone this fundamental right & terrorise them for wearing a hijab is absolutely oppressive. World must realise this is part of Indian state plan of ghettoisation of Muslims.
— Shah Mahmood Qureshi (@SMQureshiPTI) February 9, 2022
ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಫವಾದ್ ಹುಸೇನ್ ಅವರು, 'ಭಾರತದಲ್ಲಿನ ಬೆಳವಣಿಗೆಗಳು ಆತಂಕಕಾರಿಯಾಗಿವೆ. ಯಾವುದೇ ಇತರ ಉಡುಪುಗಳಂತೆ ಹಿಜಾಬ್ ಧರಿಸುವುದೂ ವೈಯಕ್ತಿಕ ಆಯ್ಕೆಯಾಗಿದೆ. ನಾಗರಿಕರಿಗೆ ಮುಕ್ತ ಅವಕಾಶವನ್ನು ನೀಡಬೇಕು' ಎಂದು ಆಗ್ರಹಿಸಿದ್ದರು.
What’s going on in #ModiEndia is terrifying, Indian Society is declining with super speed under unstable leadership. Wearing #Hujab is a personal choice just as any other dress citizens must be given free choice #AllahHuAkbar
— Ch Fawad Hussain (@fawadchaudhry) February 8, 2022
ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಕ್ತಾರ್ ಅಬ್ಬಾಸ್ ನಕ್ವಿ ಅವರು ಪಾಕ್ ಸಚಿವರುಗಳ ಹೇಳಿಕೆಗಳಿಗೆ ಪ್ರತಿಕ್ರಿಯಿಸಿ, ಎಲ್ಲರನ್ನೂ ಒಳಗೊಳ್ಳುವ ಸಂಸ್ಕೃತಿ ಹೊಂದಿರುವಭಾರತದ ಹೆಸರು ಕೆಡಿಸುವ ಸಂಚಿನ ಭಾಗವಾಗಿ, ಕೆಲವರು ಸಮವಸ್ತ್ರ ಮತ್ತು ಸಂಸ್ಥೆಗಳ ಶಿಸ್ತಿನ ನಿರ್ಧಾರಕ್ಕೆ ಕೋಮು ಬಣ್ಣ ಬಳಿಯುತ್ತಿದ್ದಾರೆ. ಅಲ್ಪ ಸಂಖ್ಯಾತರ ಪಾಲಿಗೆ ಅಪರಾಧ ಮತ್ತು ಕ್ರೌರ್ಯದ ಅರಣ್ಯದಂತೆ ಇರುವ ದೇಶ, ಭಾರತಕ್ಕೆ ಸಹಿಷ್ಣುತೆ ಮತ್ತುಜಾತ್ಯಾತೀತೆಯ ಬಗ್ಗೆ ಬೋಧಿಸುತ್ತಿದೆ ಎಂದು ತಿರುಗೇಟು ನೀಡಿದ್ದರು.
ಹಿಜಾಬ್ ಧರಿಸಿ ಬಂದಿದ್ದ ಆರು ವಿದ್ಯಾರ್ಥಿನಿಯರಿಗೆ ಉಡುಪಿಯ ಪದವಿ ಪೂರ್ವ ಕಾಲೇಜೊಂದು ಜನವರಿಯಲ್ಲಿ ಪ್ರವೇಶ ನಿರಾಕರಿಸಿತ್ತು. ಬಳಿಕ ಈ ವಿವಾದ ರಾಜ್ಯದಾದ್ಯಂತ ವಿಸ್ತರಣೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.